ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಹೈಕಮಾಂಡ್ ಸೂಚನೆಗೆ ಕೊನೆಗೂ ಮಣಿದ ಮುಖ್ಯಮಂತ್ರಿ!

ಹೈಕಮಾಂಡ್ ಸೂಚನೆ ಬೆನ್ನಲ್ಲೇ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ವರ್ಷಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಹಸನಕ್ಕೆ ಕೊನೆಗೂ ಅಂತಿಮ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಪ್ರಸ್ತುತ ರಾಜ್ಯಪಾಲರು ಸ್ಥಳದಲ್ಲಿ ಇಲ್ಲದ ಕಾರಣ, ಸಿಎಂ ತಮ್ಮ ಪದತ್ಯಾಗದ ಪತ್ರವನ್ನು ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದಾರೆ. ಇದರೊಂದಿಗೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಅಧಿಕಾರ ಹಂಚಿಕೆಯ ಊಹಾಪೋಹಗಳು ನಿಜವಾಗಿವೆ.

ಭಾವುಕರಾಗಿ ಕಣ್ಣೀರು ಹಾಕಿದ ಸಿದ್ದರಾಮಯ್ಯ

ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಮುಂಜಾನೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸಚಿವರಿಗಾಗಿ ವಿಶೇಷ ಉಪಹಾರ ಕೂಟವನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ತಾವು ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿರುವ ನಿರ್ಧಾರವನ್ನು ಸಚಿವ ಸಹೋದ್ಯೋಗಿಗಳಿಗೆ ಸಿದ್ದರಾಮಯ್ಯ ಖುದ್ದಾಗಿ ತಿಳಿಸಿದರು. ಈ ವೇಳೆ ತೀವ್ರ ಭಾವುಕರಾದ ಅವರು ಕಣ್ಣೀರು ಹಾಕಿದರು. “ನಾನು ಮುಖ್ಯಮಂತ್ರಿಯಾಗಿ ಜಾರಿಗೆ ತಂದಿರುವ ಜನಪದ ಯೋಜನೆಗಳು ಮತ್ತು ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಂಪೂರ್ಣ ತೃಪ್ತಿಯಿದೆ. ಮುಂದೆಯೂ ಜನರಿಗೆ ಒಳ್ಳೆಯ ಯೋಜನೆಗಳನ್ನು ತಲುಪಿಸಿ, ಉತ್ತಮ ಆಡಳಿತ ನೀಡಿ” ಎಂದು ಸಚಿವರಿಗೆ ಕಿವಿಮಾತು ಹೇಳಿದರು.

2023 ರಿಂದ ಆರಂಭವಾಗಿದ್ದ ಅಧಿಕಾರ ಸಮರ

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡಿ ಪ್ರಚಂಡ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಗದ್ದುಗೆಗಾಗಿ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿ, ಮೇ 20ರಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಹಸಿರು ನಿಶಾನೆ ತೋರಿತ್ತು. ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಅಂದಿನಿಂದಲೇ ಇಬ್ಬರು ನಾಯಕರ ಬೆಂಬಲಿಗರ ನಡುವೆ ಅಧಿಕಾರ ಹಂಚಿಕೆಯ ಒಪ್ಪಂದದ ಕುರಿತು ಆಂತರಿಕ ಕಲಹಗಳು ಮುಂದುವರಿದಿದ್ದವು.

ಹೈಕಮಾಂಡ್ ಅಂತಿಮ ತೀರ್ಪು

ಇತ್ತೀಚಿನ ಪಂಚರಾಜ್ಯಗಳ ಚುನಾವಣೆಯ ಬೆನ್ನಲ್ಲೇ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಮುಖಂಡರು ಕರೆಸಿಕೊಂಡಿದ್ದರು. ಎಐಸಿಸಿ ವರಿಷ್ಠರು ನಡೆಸಿದ ಸುದೀರ್ಘ ಸಭೆಯಲ್ಲಿ, ಲೋಕಸಭೆ ಹಾಗೂ ಮುಂದಿನ ರಾಜಕೀಯ ಸಮೀಕರಣಗಳನ್ನು ಅಳೆದು ತೂಗಿ ನಾಯಕತ್ವ ಬದಲಾವಣೆಯ ಅಂತಿಮ ನಿರ್ಧಾರಕ್ಕೆ ಬರಲಾಗಿತ್ತು. ಹೈಕಮಾಂಡ್ ನೀಡಿದ ಸ್ಪಷ್ಟ ನಿರ್ದೇಶನದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಈಗ ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.

Related Stories