ಆರ್‌ಎಸ್‌ಎಸ್‌ ನೋಂದಣಿ ವಿವಾದ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಶಾಸಕ ಯಶ್‌ಪಾಲ್ ಸುವರ್ಣ ತೀವ್ರ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದ ನೋಂದಣಿ ಕುರಿತು ಪ್ರಶ್ನಿಸಿರುವ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಉಡುಪಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದ ನೋಂದಣಿ ಕುರಿತು ಪ್ರಶ್ನಿಸಿರುವ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತ ಸ್ವಾತಂತ್ರ್ಯ ಪಡೆಯುವ ಮುನ್ನವೇ ರಾಷ್ಟ್ರೀಯತೆಯ ತಳಹದಿಯಲ್ಲಿ ಸ್ಥಾಪನೆಯಾಗಿ ಶತಮಾನೋತ್ಸವದ ಸಂಭ್ರಮದಲ್ಲಿರುವ ಆರ್‌ಎಸ್‌ಎಸ್‌ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ, ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಪ್ರಶ್ನಿಸುವ ಧೈರ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ತುರ್ತು ಪರಿಸ್ಥಿತಿ, ಪ್ರಕೃತಿ ವಿಕೋಪಗಳು ಸೇರಿದಂತೆ ಅನೇಕ ಸಂದರ್ಭಗಳಲ್ಲಿ ಆರ್‌ಎಸ್‌ಎಸ್‌ನ ಲಕ್ಷಾಂತರ ಕಾರ್ಯಕರ್ತರು ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣದ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂಘಟನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯತೆ ವಿರೋಧಿ ಮನೋಭಾವವನ್ನು ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು.

ಆರ್‌ಎಸ್‌ಎಸ್‌ನ ರಾಷ್ಟ್ರನಿರ್ಮಾಣ ಕಾರ್ಯವೈಖರಿಯನ್ನು ವಿಶ್ವದ ಹಲವು ರಾಷ್ಟ್ರಗಳೇ ಮೆಚ್ಚಿಕೊಂಡಿವೆ. ದೇಶಸೇವೆಗೆ ಸಮರ್ಪಿತ ವ್ಯಕ್ತಿಗಳನ್ನು ರೂಪಿಸುವ ಸಂಘಟನೆಯನ್ನು ಕಾಂಗ್ರೆಸ್ ಸಚಿವರೇ ಟೀಕಿಸಲು ಮುಂದಾಗಿರುವುದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯತೆ ಹಾಗೂ ಹಿಂದೂ ವಿರೋಧಿ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
ಸಮಾಜದಲ್ಲಿ ಆರ್‌ಎಸ್‌ಎಸ್‌ ಕುರಿತು ಅನುಮಾನ ಮೂಡಿಸುವ ರೀತಿಯ ಹೇಳಿಕೆಗಳ ಮೂಲಕ ಮತೀಯವಾದಿ ಮತ್ತು ರಾಷ್ಟ್ರವಿರೋಧಿ ಶಕ್ತಿಗಳನ್ನು ಓಲೈಕೆ ಮಾಡಲು ರಾಜ್ಯದ ಗೃಹ ಸಚಿವರೇ ಮುಂದಾಗಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಯಶ್‌ಪಾಲ್ ಸುವರ್ಣ ಟೀಕಿಸಿದರು.

ಇದನ್ನೂ ಓದಿ: ಆಧಾರ್ ಕಾರ್ಡ್ ಬಳಕೆಗೆ ಬ್ರೇಕ್? ಕೇಂದ್ರ-ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ಭಯೋತ್ಪಾದನೆ, ಸಮಾಜದಲ್ಲಿ ಅಶಾಂತಿ ಹಾಗೂ ರಾಷ್ಟ್ರದ ಆಂತರಿಕ ಭದ್ರತೆಗೆ ಸವಾಲು ಒಡ್ಡಿರುವ ಹಲವಾರು ಇಸ್ಲಾಮಿಕ್ ಮತೀಯ ಶಕ್ತಿಗಳ ವಿರುದ್ಧ ಸಾಕಷ್ಟು ಪುರಾವೆಗಳಿದ್ದರೂ, ಈವರೆಗೆ ಪ್ರಿಯಾಂಕ್ ಖರ್ಗೆ ಯಾವುದೇ ಕ್ರಮ ಅಥವಾ ಹೇಳಿಕೆ ನೀಡಿಲ್ಲ ಎಂದು ಆರೋಪಿಸಿದರು.ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸಿ ಮಸೀದಿಗಳು ಮತ್ತು ಮದರಸಾಗಳು ನಿರ್ಮಾಣವಾಗುತ್ತಿದ್ದರೂ ಸರ್ಕಾರ ಮೌನ ವಹಿಸಿದೆ. ಈ ಬಗ್ಗೆ ಕ್ರಮ ಕೈಗೊಳ್ಳದೆ ಹಿಂದೂ ವಿರೋಧಿ ಹೇಳಿಕೆಗಳ ಮೂಲಕ ಹಿಂದೂ ಸಮಾಜದ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ದೂರಿದರು.

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನರಲ್ಲಿ ಆಕ್ರೋಶ ಹೆಚ್ಚುತ್ತಿರುವ ಸಂದರ್ಭದಲ್ಲಿ, ಇಂತಹ ವಿವಾದಾತ್ಮಕ ಹೇಳಿಕೆಗಳ ಮೂಲಕ ಜನರ ಗಮನ ಬೇರೆಡೆ ಸೆಳೆಯುವ ವಿಫಲ ಪ್ರಯತ್ನವನ್ನು ಪ್ರಿಯಾಂಕ್ ಖರ್ಗೆ ಮಾಡುತ್ತಿದ್ದಾರೆ. ರಾಷ್ಟ್ರೀಯವಾದಿ ಚಿಂತನೆಯ ಸಮಾಜವು ಆರ್‌ಎಸ್‌ಎಸ್‌ ವಿರುದ್ಧದ ಇಂತಹ ಹೇಳಿಕೆಗಳಿಗೆ ತಕ್ಕ ಉತ್ತರ ನೀಡಲಿದೆ ಎಂದು ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.

 

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories