ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಧಾನಕ್ಕೆ ಹರಡುತ್ತಿದೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ 10 ಮಂದಿಗೆ ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬ್ರಿಟನ್ನಿಂದ ಆಗಮಿಸಿದ್ದ 42 ಜನರಿಗೆ ಆರ್ಟಿಪಿಸಿಆರ್ ನಡೆಸಲಾಗಿದ್ದು, ಇದರಲ್ಲಿ 32 ಮಂದಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊಸ ಮಾದರಿಯ 10 ಮಂದಿಗೆ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು 42 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಎಲ್ಲರೂ ಆರೋಗ್ಯವಾಗಿದ್ದಾರೆ ಎಂದಿದ್ದಾರೆ.
ಎಲ್ಲರನ್ನು ನಿಗದಿಪಡಿಸಿದ ಆಸ್ಪತ್ರೆಯಲ್ಲೇ ಚಿಕಿತ್ಸೆಗೊಳಪಡಿಸಲಾಗಿದೆ. ಯಾರಿಗೂ ತೀವ್ರತರವಾದ ಸೋಂಕು ಆವರಿಸಿಲ್ಲ. ಸಾರ್ವಜನಿಕರು ಆತಂಕ ಪಡಬಾರದು ಎಂದು ಮನವಿ ಮಾಡಿದರು.
ಕೊರೋನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯು ರಾಜ್ಯದಲ್ಲಿ ಹೆಚ್ಚಾಗುತ್ತಿದೆ. 10 ಸಾವಿರ ಮಾತ್ರ ನಮ್ಮಲ್ಲಿ ಆಯಕ್ಟಿವ್ ಫಂಕ್ಷನ್ ಆಗಿರುವುದು. 12 ಲಕ್ಷ ಜನ ಈಗಾಗಲೆ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಸುಧಾಕರ್ ಮಾಹಿತಿ ನೀಡಿದರು.