ಮಂಗಳೂರು : ಕರೋನಾ ಸೋಂಕಿತನ ಸಹೋದರ ಗ್ರಾಮ ಪಂಚಾಯತ್ ಮೀಟಿಂಗ್ ನಲ್ಲಿ ಭಾಗಿಯಾದ ಹಿನ್ನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ, ಪಿ.ಡಿ.ಒ. ಸಹಿತ ಒಟ್ಟು 44 ಮಂದಿಗೆ ಹೋಂ ಕ್ವಾರಂಟೈನ್ ಗೆ ಒಳಪಡಿಸಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಈ ಘಟನೆ ನಡೆದಿದ್ದು, ಅಜ್ಜಾವರ ಗ್ರಾಮದ ವ್ಯಕ್ತಿಯೋರ್ವರು ಮಾರ್ಚ್ 18ರಂದು ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರಿಗೆ ಬಂದಿದ್ದರು.

ಕೊರೊನಾ ಸೋಂಕು ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ದುಬೈನಿಂದ ಬಂದಿದ್ದ ವ್ಯಕ್ತಿಯನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಆದರೆ ಮಾರ್ಚ್ 28 ರಂದು ಕೊರೊನಾ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಾಗಿತ್ತು. ಮಾರ್ಚ್ 31ರಂದು ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು.

ಇದಕ್ಕೂ ಮೊದಲು ಸೋಂಕಿತ ವ್ಯಕ್ತಿಯ ಸಹೋದರ ಅಜ್ಜಾವರ ಪಂಚಾಯತ್ ನಲ್ಲಿ ನಡೆದ ಕರೋನಾ ರಕ್ಷಣಾ ಕಾರ್ಯಪಡೆಯ ಮೀಟಿಂಗ್ ನಲ್ಲಿ ಭಾಗಿಯಾಗಿದ್ದಾನೆ. ಸೆಕೆಂಡರಿ ಕಾಂಟಾಕ್ಟ್ ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಹೋಂ ಕ್ವಾರಂಟೈನ್ ಗೆ ಸೂಚನೆ ನೀಡಲಾಗಿದೆ. ಗ್ರಾ.ಪಂ. ಅಧ್ಯಕ್ಷೆ, ಪಿ.ಡಿ.ಒ., ಎಂಟು ಮಂದಿ ಸದಸ್ಯರು ಸೇರಿ ಒಟ್ಟು 44 ಮಂದಿ ಈಗಾಗಲೇ ಪ್ರತ್ಯೇಕ ಕ್ವಾರಂಟೈನ್ ನಲ್ಲಿರುವ ಪ್ರಾಥಮಿಕ ಸಂಪರ್ಕ ಹೊಂದಿದ್ದ 13 ಮಂದಿ ಒಟ್ಟು 57 ಮಂದಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.