ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಿಬಿಎಂಪಿ ಬೆಡ್ ಬ್ಲಾಕಿಂಗ್ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ಪೀಠದಲ್ಲಿ ಪ್ರಕರಣ ವಿಚಾರಣೆ ನಡೆದಿದ್ದು, ಸಂಸದ ಹಾಗೂ ವಕೀಲ ತೇಜಸ್ವಿ ಸೂರ್ಯ ಮಾಡಿದ ಆರೋಪಗಳ ಬಗ್ಗೆ ತನಿಖೆ ನಡೆಸಿ ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯೊಳಗೆ ಸಲ್ಲಿಸಲು ಬಿಬಿಎಂಪಿಗೆ ನ್ಯಾಯಾಲಯ ಆದೇಶಿಸಿದೆ.

ಹಿರಿಯ ವಕೀಲರಾದ ಜಿ.ಆರ್.ಮೋಹನ್ ಬಿಬಿಎಂಪಿಯಲ್ಲಿ ಹಣಕ್ಕಾಗಿ ಆಸ್ಪತ್ರೆಯಲ್ಲಿ ಖಾಲಿ ಇರುವ ಬೆಡ್ ಗಳನ್ನು ಬ್ಲಾಕ್ ಮಾಡಲಾಗುತ್ತಿದೆ ಎಂಬ ಭ್ರಷ್ಟಾಚಾರ ಪ್ರಕರಣ ನಡೆದಿರುವ ಬಗ್ಗೆ ಹೈಕೋರ್ಟ್ ಗಮನ ಸೆಳೆದಿದ್ದರು. ಈಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್ ಬಿಬಿಎಂಪಿ ಹಿರಿಯ ಅಧಿಕಾರಿಗಳಿಗೆ ಆದೇಶ ಹೊರಡಿಸಿದೆ.
ಮೇ 11 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದ್ದು, ಆ ವೇಳೆಗೆ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಆ ಮೂಲಕ ಹಣಕ್ಕಾಗಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು ಅಧಿಕಾರಿಗಳು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಕೆಲದಿನಗಳ ಹಿಂದೆಯಷ್ಟೇ ವಾರ್ ರೂಂಗೆ ತೆರಳಿದ್ದ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯಗರುಡಾಚಾರ, ಸತೀಶ್ ರೆಡ್ಡಿ,ರವಿ ಸುಬ್ರಹ್ಮಣ್ಯ ಹಣಕ್ಕಾಗಿ ಬೆಡ್ ಬ್ಲಾಕಿಂಗ್ ನಡೆದಿರುವುದನ್ನು ಪತ್ತೆ ಹಚ್ಚಿದ್ದರು.
