ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಶಾಲಾರಂಭಕ್ಕೆ ಶಿಕ್ಷಣ ಇಲಾಖೆ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಆದರೆ ಶಾಲೆ, ಕಾಲೇಜು ಆರಂಭಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಶಾಲಾರಂಭದ ವಿಚಾರದಲ್ಲಿ ರಾಜ್ಯ ಸರಕಾರ ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಆತುರದ ನಿರ್ಧಾರ ಅನಾಹುತಕ್ಕೆ ದಾರಿ ಮಾಡಿಕೊಡಲಿದೆ. ಆಂಧ್ರಪ್ರದೇಶದಲ್ಲಿಯೂ ಶಾಲೆಯನ್ನು ಆರಂಭ ಮಾಡಿದ್ದರು. ಶಾಲಾರಂಭ ಮಾಡಿದ ಮೂರನೇ ದಿನಕ್ಕೆ 260ಕ್ಕೂ ಅಧಿಕ ಮಕ್ಕಳಿಗೆ ಹಾಗೂ 160ಕ್ಕೂ ಅಧಿಕ ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಆಂಧ್ರದಲ್ಲಿ ಶಾಲಾರಂಭದ ಬೆನ್ನಲ್ಲೇ ಮಕ್ಕಳು ಹಾಗೂ ಶಿಕ್ಷಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ರಾಜ್ಯದ ಪೋಷಕರಲ್ಲಿ ಭಯವನ್ನು ಹುಟ್ಟಿಸಿದೆ. ರಾಜ್ಯ ಸರಕಾರ ಜನಾಭಿಪ್ರಾಯವನ್ನು ಸಂಗ್ರಹಿಸಲಿ. ಯಾವುದೇ ಕಾರಣಕ್ಕೂ ಮಕ್ಕಳ ಪ್ರಾಣದ ಜೊತೆಗೆ ಚೆಲ್ಲಾಟವಾಡಬಾರದು ಎಂದಿದ್ದಾರೆ.