ಬೆಂಗಳೂರು : ಆತ್ಮಹತ್ಯೆಗೆ ಶರಣಾಗಿರುವ ಹಿರಿಯ ಐಎಎಸ್ ಅಧಿಕಾರಿ ವಿಜಯಶಂಕರ್ ಅವರಿಗೆ ಕೊರೊನಾ ಟೆಸ್ಟ್ ನಡೆಸಲು ವೈದ್ಯರು ನಿರ್ಧಾರ ಮಾಡಿದ್ದಾರೆ. ಕೊರೊನಾ ಟೆಸ್ಟ್ ವರದಿ ಬಂದ ಬಳಿಕವೇ ಪೋಸ್ಟ್ ಮಾರ್ಟಮ್ ನಡೆಸಲಾಗುತ್ತದೆ.
ನಿನ್ನೆಯಷ್ಟೇ ಬೆಂಗಳೂರಿನ ಜಯನಗರದಲ್ಲಿರುವ ತನ್ನ ಮನೆಯ ಬೆಡ್ ರೂಂ ನಲ್ಲಿ ನೇಣಿಗೆ ಶರಣಾಗಿದ್ದ ಹಿರಿಯ ಐಎಎಸ್ ಅಧಿಕಾರಿ ವಿಜಯ ಶಂಕರ್ ಸಾವು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಮೇಲ್ನೋಟಕ್ಕೆ ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದಲೇ ನೇಣಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿದೆ.
ವಿಜಯ ಶಂಕರ್ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕೊರೊನಾ ಟೆಸ್ಟ್ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ. ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾವನ್ನಪ್ಪಿದವರಿಗೆ ಕೊರೊನಾ ಟೆಸ್ಟ್ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ವಿಜಯ ಶಂಕರ್ ಅವರಿಗೂ ಮಾಡಲಾಗುತ್ತಿದೆ.
ಕೊರೊನಾ ವರದಿ ಬಂದ ನಂತರವೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಇನ್ನು ವಿಜಯ ಶಂಕರ್ ಸಾವಿಗೂ ಮೊದಲೇ ಡೆತ್ ನೋಟ್ ಬರೆದಿಟ್ಟಿದ್ದಾರಾ ಅನ್ನುವ ಕುರಿತು ತಿಲಕ್ ನಗರ ಠಾಣೆಯ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.