ಕಾನ್ಪುರ : ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆಯನ್ನು ಪತ್ತೆಹಚ್ಚಲು ತೆರಳಿದ್ದ ಪೊಲೀಸ್ ತಂಡದ ಮೇಲೆ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಘಟನೆಯಲ್ಲಿ ಡಿವೈಎಸ್ಪಿ ದೇವೇಂದ್ರ ಮಿಶ್ರಾ ಸೇರಿದಂತೆ 8 ಮಂದಿ ಪೊಲೀಸ್ ಸಿಬ್ಬಂದಿ ಹತ್ಯೆಗೀಡಾಗಿದ್ದಾರೆ.
ರೌಡಿ ವಿಕಾಸ್ ದುಬೆಯನ್ನು ಪತ್ತೆ ಹಚ್ಚಲು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾನ್ಪುರದ ಚೌಬೆಪುರ್ ನ ಬಿತೂರ್ ಪ್ರದೇಶಕ್ಕೆ ಪೊಲೀಸರ ತಂಡ ಭೇಟಿಕೊಟ್ಟಿದೆ. ಈ ವೇಳೆಯಲ್ಲಿ ರೌಡಿಗಳ ತಂಡ ಪೊಲೀಸರ ಮೇಲೆಯೇ ದಾಳಿ ನಡೆಸಿದೆ. ಘಟನೆಯಲ್ಲಿ ಡಿವೈಎಸ್ಪಿ, ಮೂವರು ಇನ್ ಸ್ಪೆಕ್ಟರ್, ನಾಲ್ವರು ಕಾನ್ಸ್ಟೇಬಲ್ ಮೃತಪಟ್ಟಿದ್ದು, 6 ಮಂದಿ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಎಎಸ್ ಪಿ ಮತ್ತು ಪೊಲೀಸ್ ಮಹಾ ನಿರ್ದೇಶಕರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡದವರು ಘಟನಾ ಸ್ಥಳದ ಪರಿಶೀಲನೆ ನಡೆಸುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಲ್ಲಾ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಇನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಘಟನೆಯ ಕುರಿತು ವರದಿ ಕೇಳಿದ್ದಾರೆ. ಅಲ್ಲದೇ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.