ಬೆಂಗಳೂರು: ಕೊರೋನಾ ಎರಡನೇ ಅಲೆಯ ಸಂಕಷ್ಟದಿಂದ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಬಹುತೇಕ ಮುಹೂರ್ತ ನಿಗದಿಗೊಳಿಸಿದೆ. ಶಿಕ್ಷಣ ಇಲಾಖೆಯ ಮಾಹಿತಿಯಂತೆ ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಕಳೆದ ಮೇ 23 ರಂದು ಕೇಂದ್ರ ಸರ್ಕಾರ, ಹಲವು ರಾಜ್ಯಗಳ ಶಿಕ್ಷಣ ಸಚಿವರು ಹಾಗೂ ಸಿಬಿಎಸ್ಸಿ ಬೋರ್ಡ್ ಸಭೆ ನಡೆದಿತ್ತು. ಈ ವೇಳೆ ಪ್ರಮುಖ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ ಎನ್ನಲಾಗುತ್ತಿದೆ.
ಈ ಅಂಶಗಳನ್ನು ಪರಿಶೀಲಿಸಿದ ಬಳಿಕ ರಾಜ್ಯ ಸರ್ಕಾರ ಜುಲೈನಲ್ಲಿ ದ್ವಿತೀಯ ಪಿಯುಸಿಗೆ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ದಿನಾಂಕ ನಿಗದಿ ಬಳಿಕ ಅಧಿಕೃತ ಮಾಹಿತಿ ಹೊರಬೀಳಲಿದೆ.
ಸರ್ಕಾರದ ನಿರ್ಧಾರದ ಬಗ್ಗೆ ಪಿಯು ಬೋರ್ಡ್ ನಿರ್ದೇಶಕಿ ಆರ್.ಸ್ನೇಹಲ್ ಮಾಹಿತಿ ನೀಡಿದ್ದು, ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜುಲೈನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಧ್ಯದಲ್ಲೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದಿದ್ದಾರೆ.
ಈಗಾಗಲೇ ಪಶ್ನೆ ಪತ್ರಿಕೆ ಸಿದ್ಧಪಡಿಸಲಾಗಿದೆ. ಹೀಗಾಗಿ ಪ್ರಶ್ನೆ ಪತ್ರಿಕೆಯಲ್ಲಿ ಬದಲಾವಣೆ ಅಥವಾ ಪಠ್ಯ ಕಡಿತ ಮಾಡುವುದು ಕಷ್ಟ. ದ್ವಿತೀಯ ಪಿಯುಸಿ ಪರೀಕ್ಷೆ ಬಳಿಕವೇ ವೃತ್ತಿಪರ ಕೋರ್ಸ್ ಗಳಿಗೆ ಪರೀಕ್ಷೆ ನಡೆಸುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.
ಆದರೆ ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಾಗಿ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಪರೀಕ್ಷೆ ನಡೆಸುವುದಾದರೇ ಕನಿಷ್ಠ ಒಂದು ತಿಂಗಳ ಮೊದಲೇ ಪ್ರಕಟಿಸುವುದಾಗಿ ಸಚಿವರು ಈ ಹಿಂದೆ ಘೋಷಿಸಿದ್ದರು.
Comments are closed.