ಧಾರವಾಡ: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲುವಾಸ ಇನ್ನಷ್ಟು ದಿನ ಮುಂದುವರೆಯಲಿದೆ. ಹೈಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡಿದೆ.

ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಜಾಮೀನು ಅರ್ಜಿ ವಜಾಗೊಂಡ ಬಳಿಕ ಧಾರವಾಡ ಹೈಕೋರ್ಟ್ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಹಲವು ಭಾರಿ ಅರ್ಜಿ ವಿಚಾರಣೆ ಮುಂದೂಡಿಕೆಯಾದ ಬಳಿಕ ನಿನ್ನೆ ಜ.20 ರಂದು ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ಇಂದು ಹೈಕೋರ್ಟ್ ಪೀಠ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರಿಂದ ವಿನಯ್ ಕುಲಕರ್ಣಿ ಜಾಮೀನು ಹಾದಿ ಮತ್ತಷ್ಟು ಸಂಕಷ್ಟಕ್ಕೊಳಗಾದಂತಾಗಿದೆ.

ಬಳ್ಳಾರಿ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ ವಿಚಾರ ತಿಳಿದು ಮೌನಕ್ಕೆ ಜಾರಿದ್ದಾರೆ ಎನ್ನಲಾಗಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರಂಭದಿಂದಲೂ ವಿನಯ್ ಕುಲಕರ್ಣಿ ಹೆಸರು ಕೇಳಿಬಂದಿತ್ತಾದರೂ ಸೂಕ್ತ ಸಾಖ್ಷ್ಯಾಧಾರಗಳ ಕೊರತೆಯಿಂದ ಸ್ಥಳೀಯ ಪೊಲೀಸರು ವಿನಯ್ ಕುಲಕರ್ಣಿ ಬಂಧಿಸಿರಲಿಲ್ಲ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜಿ.ಪಂ ಸದಸ್ಯ ಯೋಗೇಶ್ ಗೌಡ್ ಕುಟುಂಬಸ್ಥರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಕೋರಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಯೋಗೇಶ್ ಗೌಡ ಕೊಲೆಗೆ ಸುಫಾರಿ ನೀಡಿದ ಆರೋಪದಡಿ ವಿನಯ್ ಕುಲಕರ್ಣಿ ಬಂಧಿಸಿತ್ತು.