ಬೆಂಗಳೂರು : ರಾಜ್ಯದಲ್ಲಿ ಎಪ್ರಿಲ್ 30ರಿಂದ ರಾಜ್ಯ 30 ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 15 ದಿನಗಳ ಕಾಲ ಲಾಕ್ ಡೌನ್ ಆದೇಶ ಇನ್ನಷ್ಟು ಬಿಗಿಯಾಗಲಿದ್ದು, ಮೀನುಗಾರರಿಗೆ ಲಾಕ್ ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀನುಗಾರರು ಮೀನುಗಾರಿಕೆಗೆ ತೆರಳು ಅವಕಾಶವನ್ನು ಕಲ್ಪಿಸಲಾಗಿದೆ. ಯಾವುದೇ ಕಾರಣಕ್ಕೂ ಕಾಳಸಂತೆಯಲ್ಲಿ ಮೀನು ಮಾರಾಟವಾಗದಂತೆ ಕ್ರಮಕೈಗೊಳ್ಳಲಾಗಿದೆ.
ಇದರಿಂದಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಿಗೆ ಅನುಕೂಲವಾಗಿದೆ ಎಂದಿದ್ದಾರೆ.
ಲಾಕ್ ಡೌನ್ ಆದೇಶವನ್ನು ರಾಜ್ಯದಲ್ಲಿ ಮುಂದುವರಿಸುವ ಬಗ್ಗೆ ನಿರ್ಧಾರಕೈಗೊಳ್ಳಲಾಗಿದೆ. ಕೃಷಿಕರಿಗೆ ಅನುಕೂಲವಾಗುವಂತೆ ಕೆಲವೊಂದು ವಿನಾಯಿತಿಯನ್ನು ನೀಡಲಾಗುತ್ತದೆ. ಜನರು ನಿತ್ಯವೂ ಅಗತ್ಯವಸ್ತುಗಳ ಖರೀದಿಗೆ ಯಾವುದೇ ಸಮಸ್ಯೆಯಾಗದಂತೆ ಲಾಕ್ ಡೌನ್ ಮುಂದುವರಿಸಲಾಗುತ್ತಿದೆ. ಲಾಕ್ ಡೌನ್ ಆದೇಶವನ್ನು ಮುಂದುವರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಘೋಷಣೆಯನ್ನು ಮಾಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.