ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಮತ್ತೆ ಶಾಕ್ ಕೊಡಲಿದೆ. ಇಂದು ಕೂಡ ಜಿಲ್ಲೆಯಲ್ಲಿ ಬರೋಬ್ಬರಿ 300 ರಿಂದ 350 ಮಂದಿಗೆ ಕೊರೊನಾ ಸೋಂಕು ದೃಢಪಡುವ ಸಾಧ್ಯತೆಯಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಅಲ್ಲದೇ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. ಇಂದು ಕೂಡ 350ಕ್ಕೂ ಅಧಿಕ ಮಂದಿಗೆ ಸೋಂಕು ದೃಢಪಡುವ ಸಾಧ್ಯತೆಯಿದ್ದು, ಸಂಜೆಯ ವೇಳೆಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.

ಮುಂಬೈನಿಂದ ಬಂದಿರುವ ಸುಮಾರು ಶೇ.90 ರಷ್ಟು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಯನ್ನು ನೀಡಲಾಗಿದೆ. ಕೊರೊನಾ ಪಾಸಿಟಿವ್ ಬಂದವರ ಮನೆಯನ್ನು ಸೀಲ್ ಡೌನ್ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಾಗಿ ವಲಸೆ ಕಾರ್ಮಿಕರಿಂದಲೇ ಕೊರೊನಾ ಸೋಂಕು ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಗೆ ಪಾಸಿಟಿವ್ ವರದಿ ಬರುವ ಸಾಧ್ಯತೆಯಿದೆ. ಕೊರೊನಾ ಪಾಸಿಟಿವ್ ಬಂದವರ ಮನೆಯನ್ನು ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.