ಉಡುಪಿ : ದೇಶ ವಿದೇಶಗಳಲ್ಲಿ ಸುದ್ದಿ ಮಾಡಿದ್ದ ದುಬೈ ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಹತ್ಯೆ ಮಾಡಿ ಹೋಮಕುಂಡದಲ್ಲಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳನ್ನು ದೋಷಿಗಳು ಎಂದಿರುವ ಉಡುಪಿ ಜಿಲ್ಲಾ ನ್ಯಾಯಾಲಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಉದ್ಯಮಿ ಭಾಸ್ಕರ ಶೆಟ್ಟಿ ಅವರ ಹತ್ಯೆ ಪ್ರಕರಣದ ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ ಭಟ್ ಅವರನ್ನು ಆರೋಪಿಗಳು ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಆದರೆ ಸಾಕ್ಷನಾಶ ಆರೋಪದ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ಕಾರು ಚಾಲಕ ರಾಘವೇಂದ್ರನನ್ನು ಖುಲಾಸೆಗೊಳಿಸಿದೆ.
ದುಬೈನಲ್ಲಿ ಉದ್ಯಮಿಯಾಗಿದ್ದ ಭಾಸ್ಕರ ಶೆಟ್ಟಿ ಅವರು 2016ರ ಜೂನ್ ತಿಂಗಳಲ್ಲಿ ಇಂದ್ರಾಳಿಯಲ್ಲಿರುವ ತನ್ನ ಮನೆಗೆ ಬಂದಿದ್ದ ವೇಳೆಯಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ, ಪ್ರಿಯಕರ ನಿರಂಜನ್ ಭಟ್, ಪುತ್ರ ನವನೀತ್ ಶೆಟ್ಟಿ ಭೀಕರವಾಗಿ ಹತ್ಯೆ ಮಾಡಿದ್ದರು. ಪತ್ನಿ ರಾಜೇಶ್ವರಿ ಶೆಟ್ಟಿ ತನ್ನ ಪ್ರಿಯಕರನ ಜೊತೆಗೆ ಇರುವ ಪೋಟೋವನ್ನು ಗಮನಿಸಿ, ತಮ್ಮ ಎಲ್ಲ ಆಸ್ತಿಯನ್ನು ತಾಯಿಯ ಹೆಸರಿಗೆ ನೋಂದಣಿ ಮಾಡಿಸಲು ಭಾಸ್ಕರ ಶೆಟ್ಟಿ ಮುಂದಾಗಿದ್ದರು. ಇದರಿಂದ ಕೆರಳಿದ ಪತ್ನಿ ರಾಜೇಶ್ವರಿ ಪ್ರಿಯಕರ ನ ಜತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದಳು.
ಇಂದ್ರಾಳಿಯ ಮನೆಯಲ್ಲಿ ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ನಂತರ ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಗೆ ಶವವನ್ನು ತಂದಿದ್ದಾರೆ. ನಂತರ ಹೋಮ ಕುಂಡದಲ್ಲಿ ಪತಿಯ ದೇಹವನ್ನು ಸುಟ್ಟು ಹಾಕಲಾಗಿತ್ತು.ಈ ಕುರಿತು ಉಡುಪಿ ಪೊಲೀಸರು ತನಿಖೆ ನಡೆಸಿದಾಗ ಹೋಮ ಕುಂಡದಲ್ಲಿ ಹತ್ಯೆ ಮಾಡಿರುವ ವಿಚಾರ ಬಯಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಬಹುತೇಕವಾಗಿ ಪೂರ್ಣಗೊಳಿಸಿದ್ದು, ಲಾಕ್ಡೌನ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸುಬ್ರಹ್ಮಣ್ಯ ಅವರು ಜೂ. 8ಕ್ಕೆ ಮುಂದೂಡಿಕೆ ಮಾಡಿದ್ದಾರೆ. ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯ ನಾಶ ಆರೋಪಿ ರಾಘವೇಂದ್ರ ಅವರು ಜೂ.8ಕ್ಕೆ ಹಾಜರಾಗುವಂತೆ ಹಾಗೂ ಜೈಲಿನಲ್ಲಿರುವ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ್ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ 5 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಸರಕಾರಿ ವಿಶೇಷ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಎಂ.ಶಾಂತಾರಾಮ ಶೆಟ್ಟಿ ಅವರು ವಾದ ಮಂಡಿಸಿದ್ದರು.