
ಚಿಕ್ಕಮಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಗಾವಲು ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಜೇನುಗದ್ದೆಯ ಬಳಿಯಲ್ಲಿ ಘಟನೆ ನಡೆದಿದೆ. ಸಿಎಂ ಬೆಂಗಾವಲು ವಾಹನವನ್ನು ಹಿಂಬಾಲಿಸುತ್ತಿದ್ದ ಬೊಲೆರೋ ಜೀಪ್ ಪಲ್ಟಿಯಾಗಿದೆ. ಅಲ್ಲದೇ ಪಲ್ಟಿಯ ರಭಸಕ್ಕೆ ಟೈಯರ್ ಬ್ಲಾಸ್ಟ್ ಆಗಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗಳಿಗೆ ಗಾಯವಾಗಿದ್ದು, ಚಾಲಕ ಶರತ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಂಗಳೂರಿನಲ್ಲಿ ನಿನ್ನೆ ನಡೆದಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆಗೆ ತೆರಳಿದ್ದು, ಇಂದು ಬೆಂಗಳೂರಿಗೆ ವಾಪಾಸಾಗುತ್ತಿದ್ದ ವೇಳೆಯಲ್ಲಿ ಬಾಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.