Mangalore : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17 ಗ್ರಾಮ ಪಂಚಾಯತ್ ಸೀಲ್ ಡೌನ್

ಮಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲೀಗ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಇದೀಗ ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರ ಬೆಳಗ್ಗೆ 9ರಿಂದ 21ರ ತನಕ ಬೆಳಗ್ಗೆ 9 ರವರೆಗೆ ಸೀಲ್‌ಡೌನ್‌ ಮಾಡಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸಹಿತ 17 ಗ್ರಾಪಂಗಳನ್ನು ಸೀಲ್ ಡೌನ್ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಸಕ್ರೀಯ ಕೊರೊನಾ ಪ್ರಕರಣಗಳು ಇರುವ ಗ್ರಾಮಗಳನ್ನು ಸೀಲ್ ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ.

ಸೀಲ್ ಡೌನ್ ಆಗಿರುವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಹೊರಗಿನ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತ ಮಾಡಲಾಗಿದೆ. ಗ್ರಾಮದಿಂದ ಹೊರಗೆ ಹೋಗುವವರಿಗೆ ಹಾಗೂ ಒಳ ಬರುವವರಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಆಸ್ಪತ್ರೆ, ಮೆಡಿಕಲ್, ಔಷಧಿ ಕೇಂದ್ರ, ಲ್ಯಾಬ್ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಅಗತ್ಯ ವಸ್ತುಗಳಾದ ಹಾಲಿನ ಬೂತ್ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಪೆಟ್ರೋಲ್ ಬಂಕ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಕೊರೋನ ಸೋಂಕು ತಗ್ಗಿಸಲು ಕೆಲವು ಕಠಿಣ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗಿದ್ದು, ನಾಗರಿಕರು ಸಹಕರಿಸಬೇಕು ಎಂದು ದ.ಕ. ಜಿಪಂ ಸಿಇಒ ಡಾ.ಕುಮಾರ್‌ ಮಾಹಿತಿ ನೀಡಿದ್ದಾರೆ.

ಇನ್ನು ಗ್ರಾಮ ಪಂಚಾಯತ್ ಸೀಲ್ ಡೌನ್ ಕಾರ್ಯವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಪಡೆಯನ್ನು ಆರಂಭಿಸಲಾಗಿದೆ. ಪ್ರಮುಖವಾಗಿ ಈ ಕಾರ್ಯಪಡೆ ಗ್ರಾಮದ ಜನರ ಮೇಲೆ ಕಣ್ಗಾವಲು ಇಡಲಿದೆ. ಅಲ್ಲದೇ ಜನರ ಅವಶ್ಯಕತೆಯ ಆಧಾರದ ಮೇಲೆ ಅಗತ್ಯವಸ್ತುಗಳನ್ನು ಪೂರೈಕೆ ಮಾಡಲಿದೆ. ಅಲ್ಲದೇ ನಿಯಮಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಪಂಚಾಯತ್ ಪಿಡಿಓ, ಪೊಲೀಸ್ ವೃತ್ತ ನಿರೀಕ್ಷಕರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ. ಸೀಲ್ ಡೌನ್ ನಿಯಮಗಳನ್ನು ಪಾಲನೆ ಮಾಡದವರ ವಿರುದ್ದ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಎಚ್ಚರಿಸಿದ್ದಾರೆ.

Comments are closed.