ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ (Heavy Rainfall in Coastal) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮೂರು ದಿನಗಳಿಂದ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಕಾಪು, ಕಾರ್ಕಳ, ಹೆಬ್ರಿ, ಬ್ರಹ್ಮಾವರ, ಉಡುಪಿ ತಾಲೂಕುಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರ ವರೆಗೆ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹವಾಮಾನ ಇಲಾಖೆಯು ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ಜಲಾವೃತವಾಗುವ ಪ್ರದೇಶಗಳನ್ನು ತಪ್ಪಿಸಲು ಎಚ್ಚರಿಕೆಯನ್ನು ನೀಡಿದೆ ಮತ್ತು ನಿರಂತರ ಮಳೆಯಿಂದ ಕುಸಿಯುವ ದುರ್ಬಲ ರಚನೆಗಳಿಂದ ದೂರವಿರಲು ಕೇಳಿದೆ. ನಿರಂತರ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪ್ರದೇಶಗಳು ಪ್ರವಾಹ ಮತ್ತು ಭೂಕುಸಿತವನ್ನು ಅನುಭವಿಸುತ್ತಿವೆ.
ಜಿಲ್ಲೆಯ ಜೀವನದಿಗಳು ತುಂಬಿ ಹರಿಯುತ್ತಿರುವುದರಿಂದಾಗಿ ಬಹುತೇಕ ಕಡೆಗಳಲ್ಲಿ ಕೃತಕ ನೆರೆ ಆವರಿಸಿದೆ. ಬಹುತೇಕ ಕಡೆಗಳಲ್ಲಿ ಮರಗಳು ಉರುಳಿಬಿದ್ದಿದ್ದು, ಮನೆಗಳಿಗೆ ಹಾನಿಯಾಗಿದೆ. ಇನ್ನು ಕಾಪು ಸಮೀಪದ ಉಳಿಯಾರಗೋಳಿ ದಂಡತೀರ್ಥ ಶಾಲೆಯ ಬಳಿಯಲ್ಲಿ ಬಾರೀ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳು ತುಂಡಾಗಿವೆ. ಇದರಿಂದಾಗಿ ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ.
ಬೈಂದೂರು ತಾಲೂಕಿನಲ್ಲಿ ಸೌಪರ್ಕಿಣಕಾ ನದಿ ಹಾಗೂ ಬ್ರಹ್ಮಕುಂಡ ನದಿ ತುಂಬಿ ಹರಿಯುತ್ತಿದೆ. ಹೊಸಾಡು, ಚಿಕ್ಕಳಿ, ನಾಡ, ಮಾರಣಕಟ್ಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೃತಕ ನೆರೆ ಹಾವಳಿ ಉಂಟಾಗಿದೆ. ವಾರಾಹಿ ನದಿ ತುಂಬಿ ಹರಿಯುತ್ತಿದ್ದು, ಹಾಲಾಡಿ, ಬಲಾಡಿ, ಹಳ್ನಾಡು, ಕಂಡ್ಲೂರು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದೆ. ಮಂಗಳವಾರ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು.
Heavy Rainfall in Coastal: Red alert declared in Udupi, D.K district