ಶೆಟ್ರಕಟ್ಟೆ ಅಪಘಾತ ಪ್ರಕರಣ: ಪೊಲೀಸ್ ಸಿಬ್ಬಂದಿ ತಲೆದಂಡ…
ಉಡುಪಿ : ಕುಂದಾಪುರದ ಶೆಟ್ರಕಟ್ಟೆಯಲ್ಲಿ ಸರ್ಕಾರಿ ಬಸ್ ಮತ್ತು ಟಿಪ್ಪರ್ ನಡುವೆ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಗ್ರಾಮಾಂತರ ಠಾಣಾ ಪಿಎಸ್ಐ ನಾಸೀರ್ ಹುಸೇನ್ ಅವರನ್ನು ಬೇರೆ ಕರ್ತವ್ಯದ ನಿಮಿತ್ತ ಅಜೆಕಾರು ಠಾಣೆಗೆ ನಿಯೋಜಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಆದೇಶಿಸಿದ್ದಾರೆ.
ಇದರ ಜೊತೆ, ಠಾಣೆಯ ಬೀಟ್ ಪೊಲೀಸ್ ಸಿಬ್ಬಂದಿ ಯಾದವ್ ಅವರನ್ನು ಅಮಾನತು ಮಾಡಲಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಜವಾಬ್ದಾರಿಯನ್ನು ಶಂಕರನಾರಾಯಣದ ಕುಂದಾಪುರ ಗ್ರಾಮಾಂತರ ವೃತ್ತದ ಸಿಪಿಐ ಜಯಂತ್ ಕಾಯ್ಕಿಣಿ ಅವರಿಗೆ ವಹಿಸಲಾಗಿದೆ.
ಪಿಎಸ್ಐ ನಾಸೀರ್ ಹುಸೇನ್ ಅವರು ಅಮಾಸೆಬೈಲು, ಬೈಂದೂರು, ಕುಂದಾಪುರ, ಕೊಲ್ಲೂರು, ಶಂಕರನಾರಾಯಣ ಸೇರಿದಂತೆ ಕುಂದಾಪುರ ಉಪವಿಭಾಗದ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚೆಗಷ್ಟೆ ಕಂಡ್ಲೂರಿನ ಗ್ರಾಮಾಂತರ ಠಾಣೆಯ ಕಾನೂನು ಸುವ್ಯವಸ್ಥೆ ಉಪನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದರು.



