ಕೋಟ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಸಿಕೆ (Covid Vaccine )ನೀಡುವ ಕಾರ್ಯ ನಡೆಯುತ್ತಿದೆ. ಆದರೆ ಬಹುತೇಕರು ಲಸಿಕೆ ಪಡೆಯಲು ನಿರಾಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ಜನರ ಮನವೊಲಿಕೆಯ ಕಾರ್ಯ ನಡೆಸುತ್ತಿದ್ದಾರೆ. ಇದೀಗ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ಪಡೆಯಲು ನಿರಾಕರಿಸಿದ ಹಲವು ಮನೆಗಳಿಗೆ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ ಅವರು ಭೇಟಿ ನೀಡಿ ಕುಟುಂಬಸ್ಥರ ಮನವೊಲಿಸಿದ್ದಾರೆ. ಅಲ್ಲದೇ ಸ್ಥಳದಲ್ಲಿಯೇ ವ್ಯಾಕ್ಸಿನ್ ನೀಡುವ ಕಾರ್ಯವನ್ನು ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ವ್ಯಾಕ್ಸಿನ್ ನೀಡುವ ಗುರಿಯಲ್ಲಿ ಶೇಕಡಾ ನೂರರಷ್ಟು ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗಾಗಲೇ ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕು ಆಡಳಿತ ಸಜ್ಜಾಗಿದೆ. ಈಗಾಗಲೇ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಲಸಿಕೆ ಪಡೆಯದವರ ಕುರಿತು ಆಶಾ ಕಾರ್ಯಕರ್ತೆಯರಿಂದ ಮಾಹಿತಿಯನ್ನು ಪಡೆದ ತಹಶೀಲ್ದಾರ್ ರಾಜಶೇಖರ ಮೂರ್ತಿ ಅವರ ನೇತೃತ್ವದಲ್ಲಿ ಮನವೊಲಿಸುವ ಕಾರ್ಯವನ್ನು ನಡೆಸಲಾಗಿದೆ.

ಕೋಟ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ಇಪ್ಪತೈದಕ್ಕೂ ಅಧಿಕ ಮಂದಿ ಮೊದಲ ಡೋಸ್ ಲಸಿಕೆಯನ್ನು ಪಡೆದಿಲ್ಲ. ಅಲ್ಲದೇ ಎರಡನೇ ಡೋಸ್ ಲಸಿಕೆ ನೀಡುವ ಕಾರ್ಯವನ್ನು ನಡೆಸಲಾಗುತ್ತಿದೆ.

ಕೊರೊನಾ ಲಸಿಕೆ ಪಡೆಯುವ ಕುರಿತು ಜನರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು. ಇದೀಗ ಕೊರೊನಾ ಹೊಸ ತಳಿಗಳ ಹರಡುವಿಕೆಯ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಜನರು ಹೆಚ್ಚು ಜಾಗೃತರಾಗಬೇಕು ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಕೊರೊನಾ ವ್ಯಾಕ್ಸಿನ್ ಪಡೆಯಲಯ ಜನರು ಭಯ ಪಡುತ್ತಿದ್ದಾರೆ. ಹೀಗಾಗಿ ಜನರಲ್ಲಿ ಭಯ ಹೋಗಲಾಡಿಸಿ ಲಸಿಕೆ ನೀಡುವ ಕಾರ್ಯವನ್ನು ನಡೆಸುವ ಕುರಿತು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಕೋಟ ಕಂದಾಯ ನಿರೀಕ್ಷಕ ರಾಜು, ಕೋಟ ಗ್ರಾಮಲೆಕ್ಕಿಗೆ ಚಲುವರಾಜು, ಸಹಾಯಕ ರಾಜು ಕುಂದರ್, ಆಶಾಕಾರ್ಯಕರ್ತೆಯರು, ಕೋಟ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಲ್ಲದೇ ಬಾರಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಮನೆಗಳಿಗೂ ಕೂಡ ತಹಶೀಲ್ದಾರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು, ಆರೋಗ್ಯಾಧಿಕಾರಿಗಳ ತಂಡ ಭೇಟಿ ನೀಡಿ ಮನವೊಲಿಕೆಯ ಕಾರ್ಯವನ್ನು ಮಾಡಿದೆ. ಬ್ರಹ್ಮಾವರ ತಾಲೂಕಿನಾದ್ಯಂತ ಲಸಿಕೆ ನೀಡುವ ಕಾರ್ಯವನ್ನು ತೀವ್ರಗೊಳಿಸಲಾಗುವುದು ಎಂದು ತಹಶೀಲ್ದಾರರು ತಿಳಿಸಿದ್ದಾರೆ.
( Brahmavar Tahsildar appeals to those who refuse to get Covid Vaccine in Kota )