ಆಸ್ಸಾಂ ಕಾರ್ಮಿಕರ ಮೇಲೆ ನೈತಿಕ ಪೊಲೀಸ್ಗಿರಿ ಪ್ರದರ್ಶನ : ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಎಫ್ಐಆರ್
ಬಾಂಗ್ಲಾ ವಲಸಿಗರ ಪತ್ತೆ ವಿಚಾರದಲ್ಲಿ ನೈತಿಕ ಪೊಲೀಸ್ಗಿರಿ ತೋರಿರುವ ಆರೋಪದ ಅಡಿಯಲ್ಲಿ ಬಜರಂಗದಳದ 9 ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಾದ ಘಟನೆಯು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಸಂಭವಿಸಿದೆ. ಹಿಂದೂಪರ ಕಾರ್ಯಕರ್ತರ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ಆಶ್ರಯ ಪಡೆದಿದ್ದಾರೆ ಎಂಬ ಅನುಮಾನ ಬಂದ ಹಿನ್ನೆಲೆಯಲ್ಲಿ ಆಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಪರಿಶೀಲನೆ ಕಾರ್ಯವನ್ನು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮಾಡಿದ್ದರು. ಈ ಸಂಬಂಧ ಇದೀಗ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ.
ಬಾಂಗ್ಲಾ ದೇಶದಲ್ಲಿ ದೀಪು ಬರ್ಬರ ಹತ್ಯೆ ಪ್ರಕರಣದ ಬಳಿಕ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇರುವ ಆಸ್ಸಾಂ ಕಾರ್ಮಿಕರ ಆಧಾರ್ ಪರಿಶೀಲನೆ ನಡೆಸುವಂತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸಿ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೂಡಿಗೆರೆ ಪಟ್ಟಣದ ವಾರದ ಸಂತೆಗೆ ಏಕಾಏಕಿ ಬಂದ ಕಾರ್ಯಕರ್ತರು ಆಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಪರಿಶೀಲಿಸಿದ್ದರು.
ಇದನ್ನೂ ಓದಿ: ಯಲ್ಲಾಪುರ ರಂಜಿತಾ ಹತ್ಯೆ ಪ್ರಕರಣ: ಕಾಡಿನಲ್ಲಿ ಆರೋಪಿ ರಫೀಕ್ ಶವ ಪತ್ತೆ, ಆತ್ಮಹತ್ಯೆ ಶಂಕೆ
ಆಧಾರ್ ಕಾರ್ಡ್ ಪರಿಶೀಲನೆ ನಡೆಸುವಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಒಂದು ವಾರಗಳ ಗಡುವು ನೀಡಿತ್ತು. ಆದರೆ ಈ ಬಗ್ಗೆ ಎರಡೂ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕಾರ್ಯಕರ್ತರೇ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದರು. ಈ ಸಂಬಂಧ ಇದೀಗ 9 ಮಂದಿ ಹಿಂದೂಪರ ಸಂಘಟನೆ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.



