ಎಸ್ಕೇಪ್ ಆಗಲು ಯತ್ನಿಸಿದ್ದ ಪಾತಕಿ ವಿಕಾಸ್ ದುಬೆ ಎನ್ ಕೌಂಟರ್

0

ಲಕ್ನೋ : ಕಾನ್ಪುರದಲ್ಲಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯನ್ನು ಉತ್ತರಪ್ರದೇಶದ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಸಿನಿಮಾ ಶೈಲಿಯಲ್ಲಿ ವಿಕಾಸ್ ದುಬೆಯನ್ನು ಕಾನ್ಪುರಕ್ಕೆ ಕರೆತರುವ ವೇಳೆಯಲ್ಲಿ ಈ ಘಟನೆ ನಡೆದಿದೆ.

ಪಾತಕಿ ವಿಕಾಸ್ ದುಬೆಯನ್ನು ಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಮಧ್ಯ ಪ್ರದೇಶದಿಂದ ಕಾನ್ಪುರಕ್ಕೆ ವಾಪಸ್ ಕರೆತರಲಾಗುತ್ತಿತ್ತು. ಆದರೆ ಇಂದು ಮುಂಜಾನೆ ಕಾನ್ಪುರದ ಬಾರ್ರಾ ಪೊಲೀಸ್ ವಲಯಕ್ಕೆ ತಲುಪುತ್ತಿದ್ದಂತೆ ವಿಕಾಸ್ ದುಬೆ ಕುಳಿತಿದ್ದ ವಾಹನವು ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ.

ಈ ವೇಳೆಯಲ್ಲಿ ಪೊಲೀಸರು ವಿಕಾಸ್ ದುಬೆಯನ್ನು ವಾಹನದಿಂದ ಹೊರಗೆ ಎಳೆಯುತ್ತಿದ್ದಂತೆಯೇ ಆರೋಪಿ ಪೊಲೀಸರ ಕೈಯಲ್ಲಿದ್ದ ಬಂದೂರು ಕಿತ್ತುಕೊಂಡು ಗುಂಡು ಹಾರಿಸಲು ಯತ್ನಿಸಿದ್ದಾನೆ. ಈ ವೇಳೆಯಲ್ಲಿ ಪೊಲೀಸರು ವಿಕಾಸ್ ದುಬೆ ಮೇಲೆ ಪ್ರತಿದಾಳಿ ನಡೆಸಿದ್ದು, ಪೊಲೀಸರು ಎನ್ ಕೌಂಟರ್ ನಲ್ಲಿ ವಿಕಾಸ್ ದುಬೆಯನ್ನು ಹೊಡೆದುರುಳಿಸಿದ್ದಾರೆ.

ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು. ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ.

ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ದುಬೆ ಬೆಂಬಲಿಗರು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಪುರ ಎಕ್‍ಕೌಂಟರ್ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜೈನ್‍ನಲ್ಲಿ ಬಂಧಿಸಲಾಗಿತ್ತು. ಗುರುವಾರ ಉಜ್ಜಯಿನಿಯಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ತೆರಳಿದ್ದ ವೇಳೆಯಲ್ಲಿ ದೇವಸ್ಥಾನ ಭದ್ರತಾ ಸಿಬ್ಬಂಧಿ ದುಬೆಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ದೇವಸ್ಥಾನದಿಂದ ಹೊರಬರುವಷ್ಟರಲ್ಲಿ ಪೊಲೀಸರು ಸಿನಿಮಾ ಶೈಲಿಯಲ್ಲಿ ದುಬೆಯನ್ನು ಬಂಧಿಸಿದ್ದರು. ಈ ವೇಳೆಯಲ್ಲಿ ಆರೋಪಿ ವಿಕಾಸ್ ದುಬೆಯನ್ನು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.

ಇನ್ನು ಆರೋಪಿ ವಿಕಾಸ್ ದುಬೆಯ ಸಹಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗ ಮಧ್ಯೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ ಪರಿಣಾಮ ಆರೋಪಿಗಳು ಸಾವನ್ನಪ್ಪಿದ್ದಾರೆ ಎಂದು ಕಾನ್ಪೂರ ಎಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದರು.

Leave A Reply

Your email address will not be published.