ಗ್ಯಾಸ್ ಕೊರತೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ಎಸ್ಪಿ ಎಚ್ಚರಿಕೆ

ಗ್ಯಾಸ್ ಬುಕ್ಕಿಂಗ್ ಅಥವಾ ಗ್ಯಾಸ್ ಸಿಲಿಂಡರ್ ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಅಪರಿಚಿತರು ಕರೆಮಾಡಿ ಅಥವಾ ಸಂದೇಶ ಕಳುಹಿಸಿ ನಕಲಿ ಲಿಂಕ್‌ಗಳನ್ನು ಶೇರ್ ಮಾಡುತ್ತಿದ್ದಾರೆ.

ಉಡುಪಿ: ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬುಕ್ಕಿಂಗ್ ಸಮಸ್ಯೆಯನ್ನು ದುರುಪಯೋಗಪಡಿಸಿಕೊಂಡು ಸೈಬರ್ ವಂಚಕರು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡಿರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಗ್ಯಾಸ್ ಬುಕ್ಕಿಂಗ್ ಅಥವಾ ಗ್ಯಾಸ್ ಸಿಲಿಂಡರ್ ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಅಪರಿಚಿತರು ಕರೆಮಾಡಿ ಅಥವಾ ಸಂದೇಶ ಕಳುಹಿಸಿ ನಕಲಿ ಲಿಂಕ್‌ಗಳನ್ನು ಶೇರ್ ಮಾಡುತ್ತಿದ್ದಾರೆ. ಆ ಲಿಂಕ್‌ಗಳನ್ನು ಓಪನ್ ಮಾಡಿದರೆ ಅಥವಾ APK ಫೈಲ್‌ಗಳನ್ನು ಇನ್‌ಸ್ಟಾಲ್ ಮಾಡಿದರೆ, ವಂಚಕರು ಬ್ಯಾಂಕ್ ಖಾತೆ ವಿವರಗಳು ಹಾಗೂ OTP ಪಡೆದು ಹಣ ದೋಚುವ ಪ್ರಕರಣಗಳು ವರದಿಯಾಗಿವೆ.ಈ ರೀತಿಯ ವಂಚನೆಗೆ ಈಗಾಗಲೇ ಉಡುಪಿಯಲ್ಲಿ ಇಬ್ಬರು ನಾಗರಿಕರು ಒಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಉಡುಪಿ : ಗ್ಯಾಸ್​ ಅಭಾವ.. ಸಂಕಷ್ಟದಲ್ಲಿ ಚಿನ್ನಾಭರಣ ತಯಾರಕರು..!

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡಬಾರದು, ಅಧಿಕೃತ ಆಪ್‌ಗಳು ಹಾಗೂ ವೆಬ್‌ಸೈಟ್‌ಗಳ ಮೂಲಕವೇ ಗ್ಯಾಸ್ ಸಂಬಂಧಿತ ಸೇವೆಗಳನ್ನು ಪಡೆಯಬೇಕು. ಜೊತೆಗೆ OTP ಅಥವಾ ಬ್ಯಾಂಕ್ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಎಸ್ಪಿ ಮನವಿ ಮಾಡಿದ್ದಾರೆ. ಸಂದೇಹಾಸ್ಪದ ಕರೆ ಅಥವಾ ಸಂದೇಶಗಳು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಹರಿರಾಂ ಶಂಕರ್ ತಿಳಿಸಿದ್ದಾರೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories