Upper Bhadra Project : ಚಿಕ್ಕಮಗಳೂರು : ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯ ಮೂಲಕ ಡಿಸೆಂಬರ್ 29ರಂದು ನೀರನ್ನು ಬಿಡುಗಡೆ ಮಾಡಲಾಗುವುದು ಎಂದು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಭದ್ರಾ ಮೇಲ್ದಂಡೆ ಯೋಜನಾ ವೃತ್ತ ನಂ.1 ಸೂಪರಿಂಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ. ಕಾಲುವೆ ನೀರನ್ನು ಅನಧಿಕೃತವಾಗಿ ಬಳಕೆ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ , ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾ ಪುರ, ಅಜ್ಜಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾದು ಹೋಗಿದೆ. ಸರ್ಕಾರದ ಆದೇಶದಂತೆ ಶಾಂತಿಪುರ ಪಂಪ್ ಹೌಸ್ -1, ಜಂಭದ ಹಳ್ಳ, ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ, ಪಂಪ್ ಹೌಸ್-2, ಅಜ್ಜಂಪುರದ ಸುರಂಗದ ಮಾರ್ಗವಾಗಿ ಹೆಬ್ಬೂರು ಗ್ರಾಮದ ಹತ್ತಿರವಿರುವ ವೈ ಜಂಕ್ಷನ್ ಮುಖಾಂತರ ಡಿಸೆಂಬರ್ 29 ರಿಂದ ನೀರನ್ನು ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೀರು ಬಿಡುಗಡೆ ಆದ ನಂತರದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಕಾಲುವೆ ಮತ್ತು ಹಳ್ಳದ ಪಾತ್ರದಲ್ಲಿ ಸಾರ್ವಜನಿಕರು ಸಂಚಾರ ನಡೆಸುವುದಕ್ಕೆ ನಿಷೇಧ ಹೇರಲಾಗಿದೆ. ಮಾತ್ರವಲ್ಲ ಜಾನುವಾರುಗಳನ್ನು ಕಾಲುವೆಯ ಒಳಗಡೆ ಬಿಡುವುದು ಸೇರಿದಂತೆ ಇತರ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ.
ಇದನ್ನೂ ಓದಿ : ಕಾರವಾರ- ಬೆಂಗಳೂರು ರೈಲು ಸಂಚಾರ ಡಿಸೆಂಬರ್ 14 ರಿಂದ ರದ್ದು
ಇಲಾಖೆಯ ಸೂಚನೆಯನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್ಸೆಟ್ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರವಾಗಿದೆ. ಈ ರೀತಿಯಲ್ಲಿ ಕಾನೂನು ಉಲ್ಲಂಘನೆ ಮಾಡುವವರ ವಿರುದ್ದ ಕಾನೂರು ರೀತಿಯಲ್ಲಿ ಕ್ರಮವನ್ನು ಜರುಗಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಲಾಗಿದೆ.
ಏನಿದು ಭದ್ರಾ ಮೇಲ್ಡಂಡೆ ಯೋಜನೆ ?
ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ಕೃಷಿ ಹಾಗೂ ಕುಡಿಯಲು ನೀರು ಒದಗಿಸುವ ಪ್ರಮುಖ ಯೋಜನೆಯಾಗಿದೆ. ಈ ಯೋಜನೆ ಮೂಲಕ 5,57,022 ಎಕರೆ (2,25,515 ಹೆಕ್ಟೇರ್) ಭೂ ಪ್ರದೇಶಕ್ಕೆ ನೀರಾವರಿ ಒದಗಿಸಲಾಗುತ್ತದೆ. ಭೂ ಪ್ರದೇಶಗಳ ಜೊತೆಗೆ ಜಿಲ್ಲೆಗಳಲ್ಲಿನ 367 ಸಣ್ಣ ನೀರಾವರಿ ಕೆರೆಗಳ ತುಂಬಿಸುವ ಉದ್ದೇಶವನ್ನು ಹೊಂದಲಾಗಿದೆ.
ಇದನ್ನೂ ಓದಿ : ಕೋವಿಡ್-19 ಹೊಸ ರೂಪಾಂತರ JN.1: ಕರ್ನಾಟಕದಲ್ಲಿ 24 ಗಂಟೆಯಲ್ಲಿ 2 ಸಾವು 74 ಹೊಸ ಪ್ರಕರಣ ದಾಖಲು
ಭದ್ರಾ ಮೇಲ್ದಂಡೆ ಯೋಜನೆಯ ಮೊದಲ ಹಂತದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ತುಂಗಾ ನದಿಯಿಂದ 17.40 ಟಿಎಂಸಿ ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಭದ್ರಾ ಜಲಾಶಯಕ್ಕೆ ನೀರು ಹರಿಸಲಾಗುತ್ತದೆ. ಭದ್ರಾ ಜಲಾಶಯದಿಂದ 29.90 ಟಿಎಂಸಿ ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಅಜ್ಜಂಪುರ ಸುರಂಗಕ್ಕೆ ಕೊಡೊಯ್ಯಲಾಗುತ್ತದೆ. ಅಜ್ಜಂಪುರ ಸುರಂಗದ ಮೂಲಕ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸುವ ಯೋಜನೆ ಒಳಗೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ 20,150 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಮೂಲಕ ನೀರು ಒದಗಿಸವುದು ಹಾಗೂ 29 ಕೆರೆಗಳನ್ನು ತುಂಬಿಸಲಾಗುತ್ತದೆ. ಚಿತ್ರದುರ್ಗ ಶಾಖಾ ಕಾಲುವೆಯ ಮೂಲಕ 134.597 ಕಿ.ಮೀ ಉದ್ದದ ಕಾಲುವೆ ಮುಖಾಂತರ ಚಿಕ್ಕಮಗಳೂರು ಜಿಲ್ಲೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ1,07,265 ಹೆಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಕಲ್ಪಿಸಿ157 ಕೆರೆಗಳಿಗೆ ನೀರನ್ನು ತುಂಬಿಸಲಾಗುತ್ತದೆ.
ಇದನ್ನೂ ಓದಿ : ಯುವನಿಧಿ ಯೋಜನೆ ಇಂದಿನಿಂದ ಜಾರಿ : ಅರ್ಜಿ ಸಲ್ಲಿಸುವುದು ಹೇಗೆ ? ಯಾರೆಲ್ಲ ಅರ್ಹರು ?
ಇನ್ನು ತುಮಕೂರು ಶಾಖಾ ಕಾಲುವೆಯ ಮೂಲಕ 159.684 ಕಿ.ಮೀ. ಉದ್ದದ ಕಾಲುವೆ ಮುಖಾಂತರ ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ84,900 ಹೆಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಕಲ್ಪಿಸಿ131 ಕೆರೆಗಳಿಗೆ ನೀರು ತುಂಬಲಿದೆ. ಚಿತ್ರದುರ್ಗ ಶಾಖಾ ಕಾಲುವೆಯ ಮೂಲಕ 40749 ಹೆ. ಪ್ರದೇಶಕ್ಕೆ, ತುಮಕೂರು ಶಾಖಾ ಕಾಲುವೆಯ ಮೂಲಕ 27590 ಹೆ. ಪ್ರದೇಶಕ್ಕೆ ಮತ್ತು ಜಗಳೂರು ಶಾಖಾ ಕಾಲುವೆಯ ಮೂಲಕ 24123 ಹೆ. ಪ್ರದೇಶಕ್ಕೆ ಹನಿ ನೀರಾವರಿ ಸೌಲಭ್ಯ ಕಲ್ಪಿಸುವ ಮತ್ತು ಕೆರೆ ತುಂಬಿಸುವ ಕಾಮಗಾರಿ ಸದ್ಯ ಪ್ರಗತಿಯಲ್ಲಿದೆ.
Upper Bhadra Project main canal Water Released December 29, warning of strict action against unauthorized water use