ಸೋಮವಾರ, ಜೂನ್ 16, 2025
Homeeducationಶಾಲಾರಂಭವಲ್ಲ : ಪರಿಷ್ಕೃತ ರೂಪದಲ್ಲಿ ಶುರುವಾಗುತ್ತೆ ವಿದ್ಯಾಗಮ : ಶಾಲೆಯಲ್ಲಿ ತರಗತಿಗಳು ಹೇಗೆ ನಡೆಯುತ್ತೆ ಗೊತ್ತಾ...

ಶಾಲಾರಂಭವಲ್ಲ : ಪರಿಷ್ಕೃತ ರೂಪದಲ್ಲಿ ಶುರುವಾಗುತ್ತೆ ವಿದ್ಯಾಗಮ : ಶಾಲೆಯಲ್ಲಿ ತರಗತಿಗಳು ಹೇಗೆ ನಡೆಯುತ್ತೆ ಗೊತ್ತಾ ?

- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕೊಂಚ ಕಡಿಮೆಯಾಗುತ್ತಿದ್ದಂತೆಯೇ ಶಾಲಾರಂಭದ ಮಾತುಗಳು ಕೇಳಿಬಂದಿದೆ. ಈ ನಡುಬಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆದರೆ ಇದು ಶಾಲಾರಂಭವಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಸ್ತುವ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳ ಆರಂಭ ತಡವಾಗಿರುವುದರಿಂದಾಗಿ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸುವ ಉದ್ದೇಶದಿಂದ ವಿದ್ಯಾಗಮ ಯೋಜನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಅನುಷ್ಟಾನ ಗೊಳಿಸಲು ಮುಂದಾಗಿದೆ. ವಿದ್ಯಾರ್ಥಿಗಳ ಕಲಿಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಳೆದ ಆಗಸ್ಟ್ 8 ರಿಂದ ಆರಂಭಿಸಲಾಗಿದ್ದ ವಿದ್ಯಾಗಮ ಯೋಜನೆಯನ್ನು ಅಕ್ಟೋಬರ್ 10 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮ ಆರಂಭಿಸಿದ್ದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ ತೆರಳುವುದು, ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪದ್ಧತಿಯಂತಹ ಪಿಡುಗುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಅನುವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿ ವಿದ್ಯಾಗಮ ಕಾರ್ಯಕ್ರಮವು ನಡೆಯಲು ಅನುವು ಮಾಡಿಕೊಡ ಲಾಗಿದೆ. ಆನ್ ಲೈನ್ , ಚಂದನ ವಾಹಿನಿಯ ಪಾಠಗಳು ಎಂದಿನಂತೆ ಮುಂದುವರೆಯಲಿವೆ. ಅರ್ಧ ದಿನ ಮಕ್ಕಳು ಮಾಸ್ಕ್ ಧರಿಸಿ ಶಾಲಾವರಣಕ್ಕೆ ಬಂದು ಸಾಮಾಜಿಕ ಅಂತರದೊಂದಿಗೆ ಕುಳಿತು ಪಾಠ ಕಲಿಯಬಹುದಾಗಿದೆ. ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಪ್ರತಿ ಶಾಲೆಯಲ್ಲಿ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತದೆ. ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಮತ್ತು ಕೋವಿಡ್-19 ರ ಲಕ್ಷಣಗಳಿರುವ ವಿದ್ಯಾರ್ಥಿಗಳು ಬರುವಂತಿಲ್ಲ. ಸ್ಯಾನಿಟೈಸರ್, ಸೋಪ್ ಇತರೆ ನೈರ್ಮಲೀಕರಣ ವ್ಯವಸ್ಥೆ ಮಾಡಿಕೊಳ್ಳುವುದು.

ಮಕ್ಕಳನ್ನು ಲಭ್ಯ ಶಿಕ್ಷಕರ ಸಂಖ್ಯೆ, ಲಭ್ಯ ಕೊಠಡಿಗಳ ಅನುಸಾರವಾಗಿ 15-20 ವಿದ್ಯಾರ್ಥಿಗಳ ತಂಡ ರಚಿಸುವುದು. ಆಯಾ ಸ್ತರದ ಸ್ಥಳೀಯ ಸಂಸ್ಥೆಗಳು ಸ್ಯಾನಿಟೈಸೇಷನ್ ಜವಾಬ್ದಾರಿ ತೆಗೆದುಕೊಳ್ಳಲಿದ್ದು, ಮಕ್ಕಳು ಕುಡಿಯಲು ನೀರನ್ನು ತಮ್ಮೊಂದಿಗೆ ಮನೆಯಿಂದಲೇ ತರಲು ಸಲಹೆ ನೀಡಬಹುದು. ಅಗತ್ಯ ಬಿದ್ದಾಗ ಸ್ಥಳೀಯ ಆರೋಗ್ಯ ಇಲಾಖೆಯ ಸಹಕಾರ ಪಡೆಯಲು ಅವಕಾಶವಿದೆ. ಇದೇ ರೀತಿಯ ಹತ್ತು ಹಲವು ಕಟ್ಟುನಿಟ್ಟಿನ ಕ್ರಮಗಳೊಂದಿಗೆ ವಿದ್ಯಾಗಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ವಿದ್ಯಾಗಮದ ಅನುಷ್ಠಾನಾಧಿಕಾರಿಗಳಾಗಿದ್ದಾರೆ. ವಿದ್ಯಾಗಮ ತರಗತಿಗಳು ಪಾಳಿಗಳಲ್ಲಿ ಅಂದರೆ ಬೆಳಗ್ಗೆ 45 ನಿಮಿಷದ 3 ತರಗತಿಗಳು ಮತ್ತು ಮಧ್ಯಾಹ್ನದ ಪಾಳಿಯಲ್ಲಿ 3 ತರಗತಿಗಳನ್ನು ನಡೆಸಲಾಗುತ್ತದೆ. ಒಂದು ದಿನಕ್ಕೆ 7 ರಿಂದ 8 ತಂಡಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಪ್ಲ್ಯಾನ್ ರೂಪಿಸಲಾಗಿದೆ.

ವಿದ್ಯಾಗಮವು ಶಾಲೆಯ ಆರಂಭವಲ್ಲ. ಅತೀ ಕಡಿಮೆ ಸಂಖ್ಯೆಯ ಮಕ್ಕಳ ತಂಡದೊಂದಿಗೆ ಶಾಲಾವರಣದಲ್ಲಿ ಲಭ್ಯವಿರುವ ಸ್ಥಳದಲ್ಲಿ ಅನುಕೂಲಕ್ಕೆ ತಕ್ಕಂತೆ ಪಾಠಗಳು ನಡೆಯುತ್ತವೆ. ತಜ್ಞರ ಸಮಿತಿಯ ಶಿಫಾರಸಿನನ್ವಯ ವೈಜ್ಞಾನಿಕವಾಗಿ ತರಗತಿಗಳು ನಡೆಯುತ್ತಿದ್ದು, ಎಲ್ಲ ರೀತಿಯ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳು-ಎಸ್ಒಪಿ ಆಧಾರದಲ್ಲಿ ಕೈಗೊಳ್ಳಲಾಗುತ್ತದೆ. ಮಕ್ಕಳು ತರಗತಿ ಪಾಠಗಳಿಗೆ ಹಾಜರಾದಂತೆ ಎಲ್ಲರೂ ಒಂದೇ ಬಾರಿಗೆ ಬರುತ್ತಿಲ್ಲ. ಆಯಾ ಪ್ರದೇಶದ ಮಾರ್ಗದರ್ಶಿ ಶಿಕ್ಷಕರು ತಮಗೆ ಸನಿಹದ ನೆರೆಹೊರೆಯ ಕೆಲವೇ ಮಕ್ಕಳನ್ನು ತಂಡದಲ್ಲಿ ಪಟ್ಟಿ ಮಾಡುತ್ತಾರೆ. ಇದು ಶಾಲಾರಂಭವಲ್ಲ ಎಂಬುದನ್ನು ಪೋಷಕರು ಮನಗಾಣಬೇಕು ಎಂದಿದ್ದಾರೆ.

ವಿದ್ಯಾಗಮ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಆನ್-ಲೈನ್ ಶಿಕ್ಷಣ ವಂಚಿತರಿಗೆ ಅನುಕೂಲ ವಾಗಿದೆ. ಕಡ್ಡಾಯ ಶಿಕ್ಷಣ ಕಾಯ್ದೆಯು ಯಾವುದೇ ವಿದ್ಯಾರ್ಥಿಯ ಕಲಿಕೆಯನ್ನು ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಗಳಿಗೆ ಯಾವುದೇ ವಾತಾವರಣದಲ್ಲಿಯೂ ಶಿಕ್ಷಣವನ್ನು ನೀಡುವುದು ಸರ್ಕಾರದ ಜವಾಬ್ದಾರಿಯಾದ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗಳಿಗೆ ಕಡ್ಡಾಯವಾಗಿ ದಾಖಲಾಗಬೇಕಿದೆ ಹಾಗೆಯೇ ಅವರ ಕಲಿಕೆ ನಿರಂತರವಾಗಿರಬೇಕಿರುವಂತೆ ನೋಡಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular