ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯ ಶಾಲಾರಂಭಗೊಂಡಿದ್ದು, 1 ರಿಂದ 8ನೇ ತರಗತಿ ವರೆಗೆ ಶಾಲಾರಂಭ ಮಾಡುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಗೌರಿಬಿದನೂರು ತಾಲೂಕಿನಲ್ಲಿ ನಗರಗೆರೆ ಹೋಬಳಿಯ ಸರಕಾರಿ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಈಗಾಗಲೇ 9 ಮತ್ತು 10ನೇ ತರಗತಿಗಳು ಆರಂಭಗೊಂಡಿದ್ದು ಶೇ.80ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಜೊತೆಗೆ ಚರ್ಚಿಸಿ 1 ರಿಂದ 9ನೇ ತರಗತಿ ಆರಂಭಿಸುವ ಕುರಿತು ತೀರ್ಮಾನಿಸಲಾಗುತ್ತದೆ.
1 ರಿಂದ 8ನೇ ತರಗತಿಗಳನ್ನು ಆರಂಭಿಸುವ ಕುರಿತು ಫೆಬ್ರವರಿ 2ನೇ ಅಥವಾ ಮೂರನೇ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಆರೋಗ್ಯ ಇಲಾಖೆಯ ಅನುಮತಿಯನ್ನು ಪಡೆದು, ಸಾಧಕ ಬಾಧಕಗಳ ಕುರಿತು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.