ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ಆಶ್ರಮ ಶಾಲಾ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ಕೊಟ್ಟಿದೆ. ಆಶ್ರಮ ಶಾಲಾ ಶಿಕ್ಷಕರ ಒಟ್ಟು 493 (456+37 ಹೈ.ಕ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಡಿಸಿದ ಅಧಿಸೂಚನೆಯನ್ನು ರದ್ದುಪಡಿಸಿದೆ.

ಕರ್ನಾಟಕ ಲೋಕಸೇವಾ ಆಯೋಗವು ತಿದ್ದುಪಡಿ ಅಧಿಸೂಚನೆ ಸಂಖ್ಯೆ : ಪಿಎಸ್ಸಿ 01 ಆರ್ಟಿ (4)ಬಿ-2/ 2020, ದಿನಾಂಕ 27-10-2020 ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೋರಿಕೆಯ ಮೇರೆಗೆ ಹಿಂಪಡೆಯಲಾಗಿರುತ್ತದೆಂದು ಅಭ್ಯರ್ಥಿಗಳ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆ ರದ್ದು ಪಡಿಸಿರುವ ಕುರಿತು ಪ್ರಕಟಣೆ ಹೊರಡಿಸಿದೆ.

ಪ್ರಸ್ತುತ, ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ ಇವರು ಆಶ್ರಮ ಶಾಲಾ ಶಿಕ್ಷಕರ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ನೇಮಕಾತಿ ಮಾಡಲು ಅವಕಾಶ ಕಲ್ಪಿಸಲಾಗಿರುವುದರಿಂದ, ಸಾರ್ವಜನಿಕ ಶಿಕ್ಷಣ ಇಲಾಖೆಗೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸುವ ಮಾನದಂಡ ಹಾಗೂ ಅಹರ್ತೆಗಳನ್ವಯ ಸದರಿ ಹುದ್ದೆಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಭರ್ತಿ ಮಾಡಿಕೊಳ್ಳುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ. ಆದ್ದರಿಂದ ಕೆಪಿಎಸ್ಸಿ ಹೊರಡಿಸಲಾಗಿದ್ದ 493 ಆಶ್ರಮ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಯನ್ನು ರದ್ದುಪಡಿಸುವಂತೆ ಕೋರಿರುವ ಹಿನ್ನೆಲೆಯಲ್ಲಿ ಆಯೋಗದ ಅಧಿಸೂಚನೆಯನ್ನು ರದ್ದುಗೊಳಿಸಿ ಹಿಂಪಡೆಯಲಾಗಿದೆ.

ಆಶ್ರಮ ಶಾಲಾ ಶಿಕ್ಷಕರ ನೇಮಕಾತಿಗೆ ಕೆಪಿಎಸ್ಸಿಯು 2017 ರಲ್ಲಿ ಅಧಿಸೂಚನೆ ಹೊರಡಿಸಿ ಅರ್ಜಿ ಗಳನ್ನು ಆಹ್ವಾನಿಸಿತ್ತು. ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರ ಕೋರಿಕೆಯ ಮೇರೆಗೆ ಆಯೋಗದ ತಿದ್ದುಪಡಿ ಅಧಿಸೂಚನೆ ಸಂಖ್ಯೆ ಪಿಎಸ್ಸಿ 01 ಆರ್ಟಿ (4)ಬಿ-4/ 2018, ದಿನಾಂಕ 22-06-2018 ರಲ್ಲಿ ಸದರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿದು ಅಧಿಸೂಚನೆ ಹೊರಡಿಸಲಾಗಿದೆ.

