ಬೆಂಗಳೂರು : ಕೊರೊನಾ ಸಂಕಷ್ಟದ ನಡುವಲ್ಲೇ ಕಾಲೇಜುಗಳನ್ನು ಆರಂಭಿಸಲು ಯುಜಿಸಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರಕಾರ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ.

ದೇಶದಾದ್ಯಂತ ಹಂತ ಹಂತವಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಅನುಮತಿಯನ್ನು ನೀಡಿದೆ. ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಲೇಜು ತೆರೆಯಲು ಅನುಮತಿಯನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಜ್ಞರು, ಆರೋಗ್ಯ ತಜ್ಞರ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚರ್ಚೆಯನ್ನು ನಡೆಸಲಿದ್ದಾರೆ. ಸಭೆಯ ನಂತರದಲ್ಲಿ ಅಂತಿಮ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಆರಂಭದಲ್ಲಿ ಪದವಿ ತರಗತಿಗಳನ್ನು ತೆರೆಯಲಾಗುತ್ತದೆ. ಸಾಧಕ, ಬಾಧಕಗಳ ಅರಿತು ಹಂತ ಹಂತವಾಗಿ ಶೈಕ್ಷಣಿಕ ಚಟುವಟಿಕೆಯನ್ನು ತೆರೆಯಲು ಯುಜಿಸಿ ಸೂಚಿಸಿದೆ. ಹೀಗಾಗಿ ಎರಡನೇ ಹಂತದಲ್ಲಿ ಪ್ರೌಢ ಹಾಗೂ ಪದವಿ ಪೂರ್ವ ತರಗತಿಗಳನ್ನು ಆರಂಭಿಸಲಾಗುತ್ತದೆ. ಅಂತಿಮವಾಗಿ ಪ್ರಾಥಮಿಕ ಶಾಲೆಗಳನ್ನು ತೆರೆಯುವಂತೆ ಯುಜಿಸಿ ಸೂಚಿಸಿದೆ.

ಯುಜಿಸಿ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆಯೇ ರಾಜ್ಯದಲ್ಲಿಯೂ ಕೂಡ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಸಿದ್ದತೆಗಳು ಆರಂಭಗೊಂಡಿದೆ.