ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಸಂಕಷ್ಟದ ನಡುವಲ್ಲೇ ಶಾಲೆಗಳನ್ನು ಆರಂಭಿಸಲು ರಾಜ್ಯದಲ್ಲಿ ಸಿದ್ದತೆ ನಡೆಯುತ್ತಿದೆ. ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಿಕ್ಷಣ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸರಣಿ ಸಭೆಗಳು ನಡೆಯಲಿದೆ. ಸಭೆಯಲ್ಲಿ ಶಾಲಾರಂಭದ ಕುರಿತು ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.

ಕೊರೋನಾ ಸಂಕಷ್ಟದ ಸಮಯದಲ್ಲಿ ಶಾಲಾ -ಕಾಲೇಜುಗಳ ಪುನರಾಂಭದ ಕುರಿತು ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಆದರೆ, ಶಿಕ್ಷಣ ಇಲಾಖೆ ಮಾತ್ರ ಶಾಲೆ ತೆರೆಯುವ ಕುರಿತು ಚಿಂತನೆ ನಡೆಸುತ್ತಲೇ ಇದೆ. ನೆರೆಯ ರಾಜ್ಯಗಳಲ್ಲಿ ಶಾಲೆ, ಕಾಲೇಜುಗಳು ಪುನರಾರಂಭ ಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿಯೂ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನೇತೃತ್ವದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಸರಣಿ ಸಭೆ ನಡೆಯಲಿದೆ.
ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಆರಂಭ ಮಾಡುವ ಕುರಿತು ತಜ್ಞರ ಜೊತೆಯೂ ಚರ್ಚೆ ನಡೆಯಲಿದೆ. ಈ ಹಿಂದೆ ಅಕ್ಟೋಬರ್ ತಿಂಗಳಿನಲ್ಲಿಯೇ ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಆದರೆ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಲಾರಂಭವನ್ನು ಮುಂದೂಡಿದ್ದರು. ಅಲ್ಲದೇ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದರು. ಇದೀಗ ಮತ್ತೆ ದಿನಾಂಕವನ್ನು ಪ್ರಕಟಿಸಿ, ಮತ್ತೆ ಮುಂದೂಡುವುದು ಬೇಡಾ ಅನ್ನುವ ನಿರ್ಧಾರಕ್ಕೆ ಶಿಕ್ಷಣ ಇಲಾಖೆ ಬಂದಂತಿದೆ.
ಪ್ರಮುಖವಾಗಿ ರಾಜ್ಯದ ಪ್ರತೀ ಜಿಲ್ಲೆಯ ಡಿಡಿಪಿಐ ಅವರಿಂದ ಶಾಲಾರಂಭವನ್ನು ಮಾಡಿದ್ರೆ ಆಗುವ ಸಾಧಕ, ಬಾಧಕಗಳ ಕುರಿತು ಸಚಿವರು ಮಾಹಿತಿಯನ್ನು ಪಡೆಯಲಿದ್ದಾರೆ. ನಂತರದಲ್ಲಿ ಶಿಕ್ಷಣ ತಜ್ಞರು ಹಾಗೂ ಆರೋಗ್ಯ ತಜ್ಞರ ಜೊತೆಯಲ್ಲಿಯೂ ಚರ್ಚೆಯನ್ನು ನಡೆಸಲಿದ್ದಾರೆ. ಕೊರೊನಾ ಸೋಂಕು ಸ್ವಲ್ಪ ಮಟ್ಟಿಗೆ ತಗ್ಗಿದ್ರೂ ಕೂಡ ಶಾಲೆಗಳನ್ನು ಆರಂಭ ಮಾಡುವುದಕ್ಕೆ ಪೋಷಕರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಲೇ ಇದೆ. ಈ ವರ್ಷವನ್ನು ಶೂನ್ಯ ಶೈಕ್ಷಣಿಕ ವರ್ಷವೆಂದು ಘೋಷಿಸಬೇಕೆಂಬ ಕೂಗು ಕೇಳಿಬರುತ್ತಿದೆ. ಈ ನಡುವಲ್ಲೇ ನಡೆಯುತ್ತಿರುವ ಸರಣಿ ಸಭೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.

ಆಂಧ್ರಪ್ರದೇಶದಲ್ಲಿ ಕಳೆದ ಸೋಮವಾರದಿಂದಲೇ ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿಯೇ ರಾಜ್ಯ ಸರಕಾರ ರಾಜ್ಯದಲ್ಲಿಯೂ ಶಾಲೆಗಳನ್ನು ತೆರೆಯಲು ಉತ್ಸುಕವಾಗಿದೆ. ಆಂಧ್ರಪ್ರದೇಶದ ಮಾದರಿಯನ್ನು ಶಿಕ್ಷಣ ಅಧಿಕಾರಿಗಳು ಹಾಗೂ ಸಚಿವರು ಗಂಭೀರವಾಗಿ ಅಧ್ಯಯನ ನಡೆಸುತ್ತಿದ್ದೇವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಆದರೆ ಯಾವುದೇ ನಿರ್ಧಾರವನ್ನು ಕೈಗೊಳ್ಳುವ ಮೊದಲು ಸಾಧಕ, ಬಾಧಕಗಳ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದಿದ್ದಾರೆ. ಶಾಲೆಗಳನ್ನು ಧೀರ್ಘ ಕಾಲದವರೆಗೆ ಮುಚ್ಚುವುದರಿಂದ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮವುಂಟಾಗುತ್ತಿದೆ. ಅಲ್ಲದೇ ಆನ್ ಲೈನ್ ಶಿಕ್ಷಣದ ಮೂಲಕ ಪ್ರತೀ ವಿದ್ಯಾರ್ಥಿಯನ್ನು ತಲುಪುವುದು ಕಷ್ಟಕರವಾಗಿದೆ. ಈ ನಿಟ್ಟಿನಲ್ಲಿ ಮಾಹಿತಿಯನ್ನು ಸಂಗ್ರಹಿಸಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ನಿರ್ಧಾರಕೈಗೊಳ್ಳಲಾಗುವುದು ಎಂದಿದ್ದಾರೆ.
ಆದರೆ ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡುವುದು ರಾಜ್ಯ ಸರಕಾರ ನಿಜಕ್ಕೂ ಸವಾಲಿನ ಕೆಲಸ. ಕೊರೊನಾ ಲಾಕ್ ಡೌನ್ ನಂತರದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾದ ಮಕ್ಕಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ ಬಹುತೇಕ ಸರಕಾರಿ ಶಾಲೆಗಳಲ್ಲಿ ಕನಿಷ್ಟ ಮೂಲಸೌಕರ್ಯವೇ ಇಲ್ಲ. ಇಂತಹ ಸಂದರ್ಭದಲ್ಲಿ ಸರಕಾರಿ ಶಾಲೆಗಳಲ್ಲಿ ಸಾಮಾಜಿಕ ಅಂತರ ಪಾಲನೆ, ಸ್ಯಾನಿಟೈಸರ್, ಮಾಸ್ಕ್ ಬಳಕೆ ಮಾಡುವುದರ ಜೊತೆಗೆ ಕೊರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು ಸವಾಲಿನ ಕೆಲಸವಾಗಿದೆ. ಇನ್ನೊಂದೆಡೆ ತರಗತಿಗಳನ್ನು ನಿತ್ಯವೂ ಸ್ಯಾನಿಟೈಸ್ ಮಾಡುವುದು ಅಸಾಧ್ಯ. ಶಾಲೆಗಳಿಗೆ ಶಿಕ್ಷಕರು ಈಗಾಗಲೇ ಹಾಜರಾಗುತ್ತಿದ್ದರೂ ಕೂಡ ಯಾವುದೇ ಶಾಲೆಗಳಲ್ಲಿಯೂ ಸ್ಯಾನಿಟೈಸ್ ಮಾಡುತ್ತಿಲ್ಲ. ಹೀಗಿರುವಾಗ ಮಕ್ಕಳನ್ನು ಶಾಲೆಗೆ ಕರೆಯಿಸುವುದು ಸರಿಯಲ್ಲ ಅನ್ನೋದು ಪೋಷಕರ ವಾದ.
ಒಟ್ಟಿನಲ್ಲಿ ಶಿಕ್ಷಣ ಇಲಾಖೆ ರಾಜ್ಯದಲ್ಲಿ ಶಾಲಾರಂಭವನ್ನು ಮಾಡುವ ಮುನ್ಮ ಎಚ್ಚರಿಕೆಯ ಹೆಜ್ಜೆಯನ್ನಿರಿಸಬೇಕಾದ ಅಗತ್ಯವಿದೆ. ಶಾಲಾರಂಭಕ್ಕೂ ಮುನ್ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ನಂಬಿಕೆ ಬರುವಂತೆ ನೋಡಿಕೊಳ್ಳಬೇಕಾಗಿದೆ. ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಹೊರತು ರಾಜ್ಯದಲ್ಲಿ ಶಾಲಾರಂಭ ಕಷ್ಟಸಾಧ್ಯ.