ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ಅನಿಶ್ಚಿತತೆಯಿಂದ ಕೂಡಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಯ ಶಿಕ್ಷಕರು ಒಂದು ಅಥವಾ ಎರಡು ದಿನಗಳ ವೇತನ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಶಾಲೆಯ ಶಿಕ್ಷಕರ ಸಂಕಷ್ಟದ ಕುರಿತು ಬರೆದುಕೊಂಡಿರುವ ಸುರೇಶ್ ಕುಮಾರ್ ಅವರು, ಸಂಕಷ್ಟದ ಸಮಯದಲ್ಲಿ ಶಿಕ್ಷಕರು ಉದಾರತೆಯನ್ನು ಮೆರೆಯಬೇಕಾಗಿದೆ. ಈ ಮೂಲಕ ಸಮಾಜಕ್ಕೆ ಸಕಾರಾತ್ಮಕ ಸಂದೇಶವನ್ನು ರವಾನಿಸಬೇಕೆಂದು ವಿನಂತಿಸಿಕೊಂಡಿದ್ದಾರೆ. ಈಗಾಗಲೇ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಸ್ವಾಮಿ ಅವರು ಒಂದು ತಿಂಗಲ ವೇತನವನ್ನು ನೀಡುವುದಾಗಿ ಹೇಳಿದ್ದಾರೆ. ಅವರಂತೆಯೇ ಉಳಿದ ಶಿಕ್ಷಕರು ಸಹಾಯಕ್ಕೆ ನಿಲ್ಲಬೇಕಾಗಿದೆ. ಖಾಸಗಿ ಶಾಲಾ ಶಿಕ್ಷಕರಿಗೆ ವೇತನ ನೀಡುವ ಸಲುವಾಗಿ ಸರಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ.
ಶಿಕ್ಷಣ ಇಲಾಖೆಯಲ್ಲಿ ಲಭ್ಯ ಸಂಪನ್ಮೂಲ ಬಳಸಿಕೊಂಡು ಆರ್ಥಿಕ ಸಹಕಾರ ನೀಡಲು ಸಾಧ್ಯವಿದೆಯೇ ಅನ್ನುವ ಕುರಿತು ಚಿಂತನೆ ನಡೆಯುತ್ತಿದೆ. ಕೊರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಸರಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ವೇತನ ವಿಳಂಭವಿಲ್ಲದೇ ವೇತನ ನೀಡಲಾಗಿದೆ. ಹೀಗಾಗಿ ಶಿಕ್ಷಕರು ಮಾನವೀಯತೆಯನ್ನು ಮೆರೆಯಬೇಕಾಗಿದೆ ಎಂದಿದ್ದಾರೆ.
private institution should help their teachers and staff
How can they help, as they won’t get school fee.