ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸದಿರಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ಆದ್ರೆ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಆಗಸ್ಟ್ 23 ರಿಂದ ಶಾಲೆಗಳು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಅಗಸ್ಟ್ 23ರಿಂದ ಶಾಲೆ ಕಾಲೇಜುಗಳನ್ನು ಆರಂಭ ಮಾಡುವ ಕುರಿತು ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಘೋಷಣೆಯನ್ನು ಮಾಡಿದ್ದರು. ಆದರೆ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಗಡಿಭಾಗದ ಜಿಲ್ಲೆಗಳಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳು, ತಜ್ಞರು ಹಾಗೂ ಸಚಿವರ ಜೊತೆಗೆ ಸಭೆಯನ್ನು ನಡೆಸಿದರು. ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ವೈರಸ್ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಪಾಸಿಟಿವಿಟಿ ದರ ಶೇ.2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಶಾಲೆಗಳಲ್ಲಿ ಬೋಧಕರು, ಬೋಧಕೇತರ ಸಿಬ್ಬಂದಿ ಗಳು ಕಡ್ಡಾಯವಾಗಿ ವ್ಯಾಕ್ಸಿನೇಷನ್ ಪಡೆದುಕೊಂಡಿರಬೇಕು. ಒಂದೊಮ್ಮೆ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಶೇ.2 ಕ್ಕಿಂತ ಹೆಚ್ಚಳವಾದ್ರೆ ಶಾಲೆಗಳನ್ನು ಒಂದು ವಾರ ಬಂದ್ ಮಾಡಿ ಮತ್ತೆ ಆರಂಭಿಸಲು ಸೂಚಿಸಲಾಗಿದೆ.
ಇದನ್ನೂ ಓದಿ : ಕೊರೊನಾ ನಿಯಂತ್ರಣಕ್ಕೆ ಬಾರದೆ ಶಾಲಾರಂಭ ಬೇಡ : ಸಿದ್ದರಾಮಯ್ಯ