SSLC Exam 2024 Mass Copy : ಎಸ್ಎಸ್ಎಲ್ಸಿ ಪರೀಕ್ಷೆ ಇಂದಿನಿಂದ ರಾಜ್ಯದಾದ್ಯಂತ ಆರಂಭಗೊಂಡಿದೆ. ಮೊದಲ ದಿನದ ಪರೀಕ್ಷೆಗೆ ಒಟ್ಟು 8.26 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ನಡುವಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಸಾಮೂಹಿಕ ನಕಲು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಕೊಠಡಿ ಮೇಲ್ವಿಚಾರಕ ಶಿಕ್ಷಕನನ್ನು ಅಮಾನತ್ತುಗೊಳಿಸಿ ಆದೇಶಿಸಲಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ಎಸ್ಎಲ್ಸಿ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು, ಮೊದಲ ದಿನವೇ ವಿದ್ಯಾರ್ಥಿಗಳು ಸಾಮೂಹಿಕ ನಕಲು ನಡೆಸಿರುವುದು ಬಯಲಾಗಿದೆ. ಕೊಠಡಿಯಲ್ಲಿನ ಸಿಸಿ ಕ್ಯಾಮರಾದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ನಕಲು ಬೆಳಕಿಗೆ ಬಂದಿದ್ದು, ಕೊಠಡಿ ಮೇಲ್ವಿಚಾರದ ಸಾಹೇಬಗೌಡ ಎಂಬವರನ್ನು ಅಮಾನತ್ತುಗೊಳಿಸಲಾಗಿದೆ.
ಸುರಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಾಹೇಬಗೌಡ ಉಕ್ಕಾಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಕೊಠಡಿಯಲ್ಲಿಯೇ ಸಾಮೂಹಿಕ ನಕಲು ಕಂಡು ಬಂದಿದೆ. ಆದರೂ ಶಿಕ್ಷಕರು ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ. ಮಾತ್ರವಲ್ಲ, ಮುಖ್ಯ ಅಧೀಕ್ಷಕರ ಗಮನಕ್ಕೂ ತಂದಿರಲಿಲ್ಲ.
ಇದನ್ನೂ ಓದಿ : ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ? ಇಲ್ಲಿದೆ ಸಂಪೂರ್ಣ ಮಾಹಿತಿ, ಫಲಿತಾಂಶ ವೀಕ್ಷಿಸಲು ಕ್ಲಿಕ್ ಮಾಡಿ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪರೀಕ್ಷಾ ಅವ್ಯವಹಾರ ಕಂಡು ಬಂದಲ್ಲಿ, ತಕ್ಷಣವೇ ಮುಖ್ಯ ಅಧೀಕ್ಷಕರ ಗಮನಕ್ಕೆ ತಂದು ನಿಯಮಾನುಸಾರ ಕ್ರಮಕೈಗೊಳ್ಳಲು ಮುಖ್ಯ ಅಧೀಕ್ಷಕರಿಗೆ ಅಧಿಕಾರವಿರುತ್ತದೆ. ಆದರೆ ಸಾಹೇಬಗೌಡ ಉಕ್ಕಾಲಿ ಅವರು ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದೆ.

ಈಹಿನ್ನೆಲೆಯಲ್ಲಿ ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಎಚ್ಟಿ ಅವರು ಅಮಾನತ್ತುಗೊಳಿಸಿದ್ದಾರೆ. ಅಲ್ಲದೇ ಸಕ್ಷಮ ಪ್ರಾಧಿಕಾರದ ಲಿಖಿತ ಅನುಮತಿ ಇಲ್ಲದೇ ಕೇಂದ್ರಸ್ಥಾನವನ್ನು ತೊರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೇಸಿಗೆ ರಜೆ ವಿಸ್ತರಣೆ ? ಜೂನ್ ಎರಡನೇ ವಾರದಲ್ಲಿ ಬಾಗಿಲು ತೆರೆಯಲಿವೆ ಶಾಲೆಗಳು !
ಎಸ್ಎಸ್ಎಲ್ಸಿ ನಕಲು ತಡೆಗೆ ಮಾರ್ಗಸೂಚಿ : ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2023-24 ನೇ ಸಾಲಿನಲ್ಲಿ ಪರೀಕ್ಷಾ ಕೇಂದ್ರಗಳ ರಚನೆ ಹಾಗೂ ಪರೀಕ್ಷೆಯಲ್ಲಿ ನಕಲು ತಡೆಯಲು ಮಾರ್ಗಸೂಚಿಯನ್ನು ಹೊರಡಿಸಿದೆ.
SSLC Exam 2024 Mass Copy Room Supervisor Teacher Suspension in Yadagiri