ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಕೊರೊನಾ ಭಯದ ನಡುವಲ್ಲೇ ಪರೀಕ್ಷೆಗೆ ಸಜ್ಜಾದ ವಿದ್ಯಾರ್ಥಿಗಳು

0

ಬೆಂಗಳೂರು : ಡೆಡ್ಲಿ ಕೊರೋನಾ ವೈರಸ್ ಭೀತಿಯ ನಡುವಲ್ಲಿಯೇ ಇಂದಿನಿಂದ ರಾಜ್ಯದಾದ್ಯಂತ ಎಸ್‌ಎಸ್ಎಲ್‌ಸಿ ಪರೀಕ್ಷೆ ಆರಂಭವಾಗುತ್ತಿದೆ. ಪರೀಕ್ಷೆಗಾಗಿ ರಾಜ್ಯ ಸರಕಾರ ಹಾಗೂ ಕರ್ನಾಟಕ ಪ್ರೌಢ ಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಾದ್ಯಂತ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ರಾಜ್ಯದಲ್ಲಿಂದು ಕೊರೊನಾ ಭಯದ ನಡುವಲ್ಲೇ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ರಾಜ್ಯದಾದ್ಯಂತ 4,48,560 ಬಾಲಕರು ಹಾಗೂ 3,99,643 ಬಾಲಕಿಯರು ಸೇರಿದಂತೆ ಒಟ್ಟು 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಈಗಾಗಲೇ 2,879 ಕೇಂದ್ರಗಳನ್ನು ತೆರೆಯಲಾಗಿದೆ.

81,265 ಪರೀಕ್ಷಾ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದು, ಆರೋಗ್ಯ, ಗೃಹ, ಸಾರಿಗೆ ಸಿಬ್ಬಂದಿ ಸೇರಿದಂತೆ ಒಟ್ಟು 1,5 ಲಕ್ಷ ಸಿಬ್ಬಂದಿ ನೇಮಿಸಲಾಗಿದೆ, ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇನ್ನು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 12,674 ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

  • ಎಸ್ಎಸ್ಎಲ್ ಸಿ ಪರೀಕ್ಷೆ ಮಾರ್ಗಸೂಚಿ :
  • ವಿದ್ಯಾರ್ಥಿಗಳು ಪರೀಕ್ಷೆಯ ಆರಂಭಕ್ಕೆ ಒಂದೂವರೆ ಗಂಟೆಯ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
  • ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳನ್ನು ಸ್ಯಾನಿಸೈಟ್ ಗೆ ಒಳಪಡಿಸಬೇಕು.
  • ಸ್ಯಾನಿಟೈಸ್ ಬಳಿಕ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನೂ ಕೂಡ ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು.
  • ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಕಡ್ಡಾಯವಾಗಿ ಮಾಸ್ಕ್ ಬಳಕೆ ಮಾಡಬೇಕು. ಒಂದೊಮ್ಮೆ ವಿದ್ಯಾರ್ಥಿಗಳು ಮಾಸ್ಕ್ ಮರೆತು ಬಂದಿದ್ದರೆ, ಪರೀಕ್ಷಾ ಕೇಂದ್ರಗಳಲ್ಲಿಯೇ ಮಾಸ್ಕ್ ನೀಡುವ ವ್ಯವಸ್ಥೆಯನ್ನು ಮಾಡಭೇಕು.
  • ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಪಾಲನೆ ಮಾಡುವಂತೆ ಶಿಕ್ಷಕರು ಕ್ರಮವಹಿಸಬೇಕು. ( ಅಪ್ಪಿಕೊಳ್ಳುವುದು, ಮುಟ್ಟುವುದು, ಉಗುಳುವುದಕ್ಕೆ ಅವಕಾಶ ಕಲ್ಪಿಸಬಾರದು.
  • ವಿದ್ಯಾರ್ಥಿಗಳು ಅನಾರೋಗ್ಯ ಕಂಡುಬಂದರೆ ಮೇಲ್ವಿಚಾರಕರಿಗೆ ತಿಳಿಸಬೇಕು.
  • ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು.
  • ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿ ಹಾಗೂ ಪರೀಕ್ಷಾ ಕೇಂದ್ರದ ಸಿಬ್ಬಂಧಿಗಳನ್ನು ಹೊರತು ಪಡಿಸಿ, ಪೋಷಕರಾಗಲಿ ಅಥವಾ ಯಾವುದೇ ಇತರ ವ್ಯಕ್ತಿಗಳ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸುವುದು.
  • ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
  • ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ಕರೆತರುವ ಬಸ್ಸಿನಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಬೇಕು. ಮಾತ್ರವಲ್ಲ ಬಸ್ಸುಗಳನ್ನು ಸ್ಯಾನಿಟೈಸ್ ಮಾಡಿರಬೇಕು.
  • ಪರೀಕ್ಷಾ ಕೇಂದ್ರದ ಯಾವುದೇ ಅಧಿಕಾರಿಗಳು, ಸಿಬ್ಬಂದಿಗಳು ಯಾವುದೇ ಮಕ್ಕಳೊಂದಿಗೆ ನಿಕಟ ಸಂಪರ್ಕಕ್ಕೆ ಬರುವಂತಿಲ್ಲ.
  • ಶೌಚಾಲಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಸಾಬೂನು ಲಭ್ಯವಿರುವಂತೆ ಮುಖ್ಯ ಅಧೀಕ್ಷಕರು ನೋಡಿಕೊಳ್ಳಬೇಕು.
  • ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಯಾವುದೇ ಸಿಬ್ಬಂದಿಗಳಿಗೆ ಯಾವುದೇ ರೋಗ ಲಕ್ಷಣ ಇಲ್ಲಾ ಎಂದು ಖಚಿತ ಪಡಿಸಿಕೊಳ್ಳಬೇಕು.
  • ಪರೀಕ್ಷಾ ಕೊಠಡಿಯಲ್ಲಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ನೀಡುವ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡಿರಬೇಕು.
  • ಕೊಠಡಿಯ ಮೇಲ್ವಿಚಾರಕರು ತಮ್ಮ ಮೇಜಿನ ಮೇಲೆ ಸ್ಯಾನಿಟೈಸರ್ ಕಡ್ಡಾಯವಾಗಿ ಹೊಂದಿರಬೇಕು.

ಶಾಲೆಗಳಲ್ಲಿ ಈಗಾಗಲೇ ಪರೀಕ್ಷೆಗಾಗಿ ಸಕಲ ಸಿದ್ದತೆಗಳನ್ನೂ ಮಾಡಿಕೊಳ್ಳಲಾಗಿದ್ದು, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಶಾಲಾ ಆವರಣದುದ್ದಕ್ಕೂ ಸರ್ಕಲ್ ಗಳನ್ನು ರಚಿಸಲಾಗಿದೆ.

ಮಂಗಳೂರಿನ ಕುಲಶೇಖರದಲ್ಲಿರುವ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯಲ್ಲಿ ಶಿಕ್ಷಕರೇ ಎಸ್ಎಸ್ಎಲ್ ಸಿ ಪರೀಕ್ಷಾ ಸಿದ್ದತೆಯಲ್ಲಿ ತೊಡಗಿಕೊಂಡಿರುವುದು.

Leave A Reply

Your email address will not be published.