ಕ್ಷುಲ್ಲಕ ಕಾರಣಕ್ಕೆ ಗಲಾಟೆ : 20 ವರ್ಷದ ಯುವಕನನ್ನು ಇರಿದು ಕೊಂದ ದುಷ್ಕರ್ಮಿಗಳು

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ವಿಕೋಪಕ್ಕೆ ತಿರುಗಿದ ಪರಿಣಾಮ 20 ವರ್ಷ ಪ್ರಾಯದ ಯುವಕನನ್ನು ಆರು ಜನರು ಇರಿದು ಕೊಲೆ ಮಾಡಿದ ಘಟನೆಯು ದಕ್ಷಿಣ ದೆಹಲಿಯ ದಕ್ಷಿಣಪುರಿ (Delhi Dakshinapuri Crime News) ಪ್ರದೇಶದಲ್ಲಿ ಸಂಭವಿಸಿದೆ.
ಈ ಘಟನೆಯಲ್ಲಿ ಗಾಯಗೊಂಡಿರುವ ಪ್ರಮುಖ ಆರೋಪಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಗೂ ಐವರು ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ದಕ್ಷಿಣಪುರಿ ನಿವಾಸಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿದ್ದು ಬಳಿಕ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ವೈದ್ಯಾಧಿಕಾರಿಗಳು ಘೋಷಿಸಿದ್ದರು.
ಕ್ಷುಲ್ಲಕ ವಿಚಾರಕ್ಕೆ ಶುರುವಾದ ಜಗಳವು ವಿಕೋಪಕ್ಕೆ ತೆರಳಿ ಯುವಕನ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸಂಗಮ್ ವಿಹಾರ್ ನಿವಾಸಿಯಾದ 22 ವರ್ಷದ ಯುವಕ ಹಾಗೂ ಆತನ ಸಹಚರರು ಹಲ್ಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಕೃತ್ಯ ನಡೆಯುವಾಗ ಆರೋಪಿಗೂ ಗಾಯಗಳಾಗಿದ್ದು ಪ್ರಸ್ತುತ ಆರೋಪಿಯನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರಿಗೆ ಮಾಹಿತಿ ದೊರಕಿದೆ.
ವಿಚಾರಣೆಯ ಸಂದರ್ಭದಲ್ಲಿ ದಕ್ಷಿಣಪುರಿ ನಿವಾಸಿಗಳಾದ ಪ್ರಮುಖ ಆರೋಪಿ ಹಾಗೂ ಆತನ ಸಹಚರರು ಜಂಟಿಯಾಗಿ ಸಂತ್ರಸ್ತನ ಮೇಲೆ ದಾಳಿ ನಡೆಸಿ ಇರಿದಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಆತನ ಐವರು ಸಹಚರರನ್ನು ಬಂಧಿಸಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂಬಂಧ ವಿವಿಧ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು (Delhi Dakshinapuri Crime News) ಪೊಲೀಸರು ಮಾಹಿತಿ ನೀಡಿದ್ದಾರೆ.



