ಪಿಎಂ ಕಿಸಾನ್ 23ನೇ ಕಂತು: ರೈತರ ಖಾತೆಗೆ ಶೀಘ್ರದಲ್ಲೇ ₹2,000 ಜಮಾ

ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಅರ್ಹ ರೈತರು ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸಿದರೆ ಮಾತ್ರ ಮುಂದಿನ ಕಂತಿನ ₹2,000 ನೆರವು ಪಡೆಯಬಹುದು.

ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ದೇಶದಾದ್ಯಂತ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮುಂದಿನ ಕಂತಿನ ₹2,000 ಹಣವನ್ನು ಶೀಘ್ರದಲ್ಲೇ ಜಮಾ ಮಾಡಲು ಸಿದ್ಧತೆ ನಡೆಯುತ್ತಿದೆ.

ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳಿಗೆ ಸಜ್ಜಾಗುತ್ತಿದ್ದಾರೆ. ಬಿತ್ತನೆ ಹಾಗೂ ಇತರ ಕೃಷಿ ವೆಚ್ಚಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯ ಹಣವನ್ನು ಮುಂಗಡವಾಗಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಯೋಜನೆಯಡಿ ಈಗಾಗಲೇ 22 ಕಂತುಗಳ ಹಣ ರೈತರಿಗೆ ತಲುಪಿದ್ದು, ಮುಂದಿನ ಕಂತು 23ನೇ ಹಂತವಾಗಿರಲಿದೆ.

ಮೂಲಗಳ ಪ್ರಕಾರ, ಜುಲೈ ತಿಂಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಇದರಿಂದ ಲಕ್ಷಾಂತರ ರೈತರಿಗೆ ಕೃಷಿ ಚಟುವಟಿಕೆಗಳ ಆರಂಭದಲ್ಲೇ ಆರ್ಥಿಕ ನೆರವು ದೊರೆಯಲಿದೆ.

ಆದರೆ ಈ ಬಾರಿ ಹಣ ಪಡೆಯಲು ಇ-ಕೆವೈಸಿ (e-KYC) ಪೂರ್ಣಗೊಳಿಸುವುದು ಕಡ್ಡಾಯವಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇ-ಕೆವೈಸಿ ಪೂರ್ಣಗೊಳಿಸದ ರೈತರ ಖಾತೆಗಳಿಗೆ ಹಣ ಜಮೆಯಾಗದ ಸಾಧ್ಯತೆ ಇದೆ.

ಇ-ಕೆವೈಸಿ ಮಾಡಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಮೀಪದ ಕಾಮನ್ ಸರ್ವಿಸ್ ಸೆಂಟರ್ (CSC)ಗೆ ಭೇಟಿ ನೀಡಬಹುದು. ಅಲ್ಲದೆ ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ ಅಥವಾ ಮೊಬೈಲ್ ಆ್ಯಪ್ ಮೂಲಕವೂ ಆನ್‌ಲೈನ್‌ನಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ OTP ನಮೂದಿಸಿದ ಬಳಿಕ ಇ-ಕೆವೈಸಿ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ.

ಇನ್ನೂ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸದ ಅರ್ಹ ರೈತರು ಸಹ ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version