ಕಂದಾಯ ಜಮೀನುಗಳಲ್ಲಿ ಮನೆ ಹೊಂದಿದವರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಹಕ್ಕುಪತ್ರದ ಗ್ಯಾರಂಟಿ ..!

ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿರುವ ಕಂದಾಯ ಜಮೀನುಗಳನ್ನು ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ ಮನೆ ನಿರ್ಮಿಸಿಕೊಂಡವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ , ಈ ರೀತಿ ಮನೆ ನಿರ್ಮಿಸಿಕೊಂಡವರಿಗೆ ಹಕ್ಕು ಪತ್ರ ನೀಡಿ ಖಾತಾ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಆದರೆ ನಿಯಮಗಳನ್ನು ರೂಪಿಸಲು ಕಾಲಾವಕಾಶದ ಅಗತ್ಯವಿದೆ ಎಂದಿದ್ದಾರೆ.
ಪ್ರಶ್ನೋತ್ತರದ ಸಂದರ್ಭದಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆಎನ್ ಗಣೇಶ್ ಅವರು, ಕಂಪ್ಲಿ ಮಾತ್ರವಲ್ಲದೇ ರಾಜ್ಯಾದ್ಯಂತ ಈ ರೀತಿ ಕಂದಾಯ ಜಮೀನುಗಳಲ್ಲಿ ವಸತಿ ಮನೆ ನಿರ್ಮಿಸಿಕೊಂಡ ಅನೇಕ ಪ್ರಕರಣಗಳಿವೆ. ಇಂತವರ ದಾಖಲೆಗಳನ್ನು ಪರಿಶೀಲಿಸಿ ಹಕ್ಕು ಪತ್ರ ಒದಗಿಸುವ ಅಗತ್ಯವಿದೆ ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಈವರೆಗೆ ಕಂದಾಯ ನಿವೇಶನಗಳಿಗೆ ಖರೀದಿಯ ಕ್ರಯಪತ್ರ ದಾಖಲೆಗಳನ್ನು ಪರಿಶೀಲಿಸಿ ತೆರಿಗೆ ವ್ಯಾಪ್ತಿಗೆ ಸೇರಿಸಲು 2936 ಅರ್ಜಿಗಳು ಸ್ವೀಕೃತಗೊಂಡಿವೆ.
ಖಾಸಗಿ ಜಮೀನುಗಳಲ್ಲಿ ದಾಖಲೆ ಸಹಿತ ಜನವಸತಿಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ ಹಕ್ಕು ಪತ್ರ ಒದಗಿಸುವ ಕಾರ್ಯ ನಡೆಯುತ್ತಿದೆ. ಇದರ ಜೊತೆಯಲ್ಲಿ ಕೇವಲ ಅಗ್ರಿಮೆಂಟ್ ಆಧಾರದಲ್ಲಿ ಮನೆ ಖರೀದಿಸಿದವರಿಗೆ ಖಾತಾ ಮಾಡಿಕೊಡಲು ನಿಯಮಾವಳಿಗಳನ್ನು ರೂಪಿಸುವ ಅಗತ್ಯವಿದೆ.
ಇದು ಕೂಡಲೇ ಆಗುವಂತಹ ಕೆಲಸವಲ್ಲ. ಇದಕ್ಕೆ ಸಾಕಷ್ಟು ಕಾಲಾವಕಾಶದ ಅಗತ್ಯವಿದೆ. ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಿ ಈ ಸಮಸ್ಯೆಗೆ ಖಂಡಿತ ಪರಿಹಾರ ನೀಡುತ್ತೇವೆ ಎಂದು ಹೇಳಿದ್ದಾರೆ .



