ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ!

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ತರಲು ಸಿದ್ಧವಾಗಿದೆ. ಅರ್ಜಿ ಸಲ್ಲಿಕೆಗೆ ಮೂರು ಅಧಿಕೃತ ಕೇಂದ್ರಗಳಲ್ಲಿ ಮಾತ್ರ ಅವಕಾಶವಿದ್ದು, ಅರ್ಹತಾ ಪರಿಶೀಲನೆ ಕಟ್ಟುನಿಟ್ಟಾಗಲಿದೆ.

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಯೋಜನೆಯ ಲಾಭ ನಿಜವಾದ ಅರ್ಹ ಮಹಿಳೆಯರಿಗೆ ಮಾತ್ರ ತಲುಪುವ ಉದ್ದೇಶದಿಂದ ಹೊಸ ಅರ್ಜಿ ಹಾಗೂ ಪರಿಶೀಲನಾ ಪ್ರಕ್ರಿಯೆಯನ್ನು ಜಾರಿಗೆ ತರಲು ಸಿದ್ಧತೆ ನಡೆಯುತ್ತಿದೆ.

ಸದ್ಯ ರಾಜ್ಯದಾದ್ಯಂತ ಸುಮಾರು 1.28 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕೆಂಬ ಸುದ್ದಿಯಿಂದ ಗೊಂದಲ ಉಂಟಾಗಿದ್ದು, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ.

ಹೊಸ ವ್ಯವಸ್ಥೆಯಡಿ ಅರ್ಜಿ ಸಲ್ಲಿಕೆಗೆ ಕೇವಲ ಮೂರು ಅಧಿಕೃತ ಕೇಂದ್ರಗಳಲ್ಲಿ ಮಾತ್ರ ಅವಕಾಶ ಇರಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌ ಹಾಗೂ ಗ್ರಾಮ ಒನ್‌ ಕೇಂದ್ರಗಳ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಸೈಬರ್ ಸೆಂಟರ್‌, ಖಾಸಗಿ ಏಜೆನ್ಸಿಗಳು ಅಥವಾ ಮೊಬೈಲ್ ಆ್ಯಪ್‌ಗಳ ಮೂಲಕ ಅರ್ಜಿ ಸ್ವೀಕರಿಸುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ಯೋಜನೆಯ ಪ್ರಮುಖ ಬದಲಾವಣೆಯೊಂದಾಗಿ, ಈಗಾಗಲೇ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದ ಮಹಿಳೆ ನಿಧನರಾದರೆ, ಅವರ ಕುಟುಂಬದ ಸೊಸೆ ಅಥವಾ ಮಗಳು ಯೋಜನೆಯ ಲಾಭ ಪಡೆಯಲು ಅವಕಾಶ ನೀಡಲಾಗುತ್ತದೆ. ಆದರೆ ಅವರ ಹೆಸರು ಅದೇ ಪಡಿತರ ಚೀಟಿಯಲ್ಲಿ ಇರಬೇಕು ಎಂಬುದು ಕಡ್ಡಾಯ ಷರತ್ತು.

ಇದರ ಜೊತೆಗೆ ಆದಾಯ ತೆರಿಗೆ ಪಾವತಿದಾರರು ಹಾಗೂ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆಯಾದ ಕುಟುಂಬಗಳು ಯೋಜನೆಗೆ ಅರ್ಹರಾಗುವುದಿಲ್ಲ. ಹೊಸ ಅರ್ಜಿ ಸಲ್ಲಿಸಿದರೂ ಇಂತಹ ಅರ್ಜಿಗಳನ್ನು ತಿರಸ್ಕರಿಸುವ ಸಾಧ್ಯತೆ ಇದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, ಯೋಜನೆ ಆರಂಭವಾದ ಬಳಿಕ ಸಾವಿರಾರು ಕೋಟಿ ರೂಪಾಯಿ ನೆರವು ವಿತರಿಸಲಾಗಿದೆ. ಆದರೆ ಪರಿಶೀಲನೆ ವೇಳೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವುದು ಪತ್ತೆಯಾಗಿದೆ. ಕೆಲವು ಆದಾಯ ತೆರಿಗೆ ಪಾವತಿದಾರರು ಹಾಗೂ ಮೃತರ ಹೆಸರಿನಲ್ಲೂ ಹಣ ಜಮೆಯಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಹಂತ ಹಂತವಾಗಿ ನಡೆಸಲು ಇಲಾಖೆ ಯೋಜಿಸಿದೆ. ಏಕಕಾಲದಲ್ಲಿ ಅರ್ಜಿ ಸಲ್ಲಿಕೆಯಿಂದ ತಾಂತ್ರಿಕ ಸಮಸ್ಯೆ ಉಂಟಾಗದಂತೆ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ನೇರ ಸಂದೇಶ ಕಳುಹಿಸಿ ಅರ್ಜಿ ಸಲ್ಲಿಸುವ ದಿನಾಂಕ ಮತ್ತು ಮಾಹಿತಿಯನ್ನು ನೀಡುವ ಸಾಧ್ಯತೆ ಇದೆ.

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಪಡಿತರ ಚೀಟಿ, ಆದಾಯ ಪ್ರಮಾಣ ಪತ್ರ ಹಾಗೂ ಕುಟುಂಬದ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ. ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಇಲಾಖೆ ಸೂಚಿಸಿದೆ.

ಪ್ರಸ್ತುತ ಬಾಕಿ ಇರುವ ಕಂತುಗಳ ಹಣ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಹೊಸ ಅರ್ಜಿ ಮತ್ತು ನವೀಕರಣ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಗುವ ನಿರೀಕ್ಷೆಯಿದೆ.

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »

Related Stories