ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಬಾರೀ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಮಂಗಳೂರು ಹೊರವಲಯದ ನಾಗುರಿಯಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ಸ್ಥಳಕ್ಕೆ ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ನಾಗುರಿ ಎಂಬಲ್ಲಿ ಬಾರೀ ಮಳೆ ಗುಡ್ಡ ಕುಸಿದ್ದು ಒಂದೇ ಮನೆಯ ಮೂವರು ಸಾವನ್ನಪ್ಪಿದ್ದರು. ಮನೆಯ ಮೇಲೆ ಗುಡ್ಡದ ಮಣ್ಣು ಬಾರೀ ಪ್ರಮಾಣದಲ್ಲಿ ಕುಸಿದು ಮನೆಯ ಹೆಂಚಿನ ಚಾವಣಿ ಕುಸಿದಿದ್ದು, ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಗುಡ್ಡದ ಅಕ್ಕಪಕ್ಕ ವಾಸಿಸುವವರು ಎಚ್ಚರವಾಗಿರಿ : ಮಂಗಳೂರು ಡಿಸಿ ದರ್ಶನ್
ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ತಂಡ ಮಣ್ಣಿನಡಿಯಲ್ಲಿ ಸಿಲುಕಿದವರನ್ನೂ ರಕ್ಷಿಸಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಭೇಟಿ ನೀಡಿದ್ದು, ಕರಾವಳಿಯಲ್ಲಿ ಮಳೆಯ ಇನ್ನೂ ಮುಂದುವರಿಯಲಿದ್ದು, ಗುಡ್ಡದ ಅಕ್ಕಪಕ್ಕದಲ್ಲಿ ವಾಸಿಸುವ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ನೀಡಿದ್ದಾರೆ.
ಮೃತಪಟ್ಟವರು ಯಾರು ?
ಕಂಕನಾಡಿ ಪೊಲೀಸ್ ಠಾಣೆ ಹಿಂಭಾಗದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ಭೀಕರ ದುರಂತದಲ್ಲಿ ಮಣ್ಣನಡಿಯಲ್ಲಿ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಶಾಂತಾ, ಅನಾಮಿಕಾ ಚೌರಾಸಿಯಾ ಹಾಗೂ ಪರಿ ಎಂದು ಗುರುತಿಸಲಾಗಿದೆ. ಬಾಲಕೃಷ್ಣ, ಅಲ್ಕಾ ಹಾಗೂ ಅನುಷಾ ಎಂಬವರನ್ನು ರಕ್ಷಣಾ ತಂಡ ರಕ್ಷಿಸಿದೆ.
ನಾಗುರಿ ದುರಂತ : ದೆಹಲಿ ಪ್ರವಾಸ ಮೊಟಕುಗೊಳಿಸಿದ ಸಚಿವ ಯು.ಟಿ.ಖಾದರ್
ನಾಗೂರಿ ಘೋರ ದುರಂತ ಸಂಭವಿಸುತ್ತಿದ್ದಂತೆಯೇ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅವರು ದೆಹಲಿ ಪ್ರವಾಸವನ್ನು ಮೊಟಕುಗೊಳಿಸಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ದೆಹಲಿಯಿಂದಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ತ್ವರಿತ ಪರಿಹಾರ ಹಾಗೂ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಗಾಯಾಳುಗಳಿಗೆ ಸರಕಾರದಿಂದಲೇ ಉಚಿತ ಚಿಕಿತ್ಸೆ
ನಾಗುರಿ ದುರಂತದಲ್ಲಿ ಮೃತಪಟ್ಟವರಿಗೆ ಸರಕಾರದ ವತಿಯಿಂದಲೇ ಉಚಿತವಾಗಿ ಆಸ್ಪತ್ರೆತ ವೆಚ್ಚವನ್ನು ಭರಿಸಲು ಈಗಾಗಲೇ ಆದೇಶಿಸಲಾಗಿದೆ. ಅಲ್ಲದೇ ಮೃತರ ಕುಟುಂಬಗಳಿಗೆ ಇಂದೇ ಪರಿಹಾರದ ಮೊತ್ತವನ್ನು ವಿತರಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಯುಟಿ ಖಾದರ್ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ.
ನಾಗುರಿ ದುರಂತ : ತಪ್ಪಿತಸ್ಥರ ವಿರುದ್ಧ ಕೇಸ್ ದಾಖಲಿಸಲು ಆದೇಶ !
ಮಳೆಗಾಲದ ನೀರಿನ ಒತ್ತಡಕ್ಕೆ ಗೋಡೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಗೋಡೆಯ ಕಾಮಗಾರಿ ದೋಷದ ಕುರಿತು ತೀವ್ರ ತನಿಖೆ ನಡೆಯುತ್ತಿದೆ. ವೈಜ್ಞಾನಿಕ ಕಾರಣಗಳ ಪತ್ತೆಗೆ ಮುಂದುವರಿಕೆ ಆಗಿದೆ. ಒಂದೊಮ್ಮೆ ಕಳಪೆ ಕಾಮಗಾರಿ ನಡೆದಿದ್ರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಅಲ್ಲದೇ ಅನಧಿಕೃತವಾಗಿ ಗುಡ್ಡ ಅಗೆದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಪ್ರಕರಣದ ತನಿಖೆಗಾಗಿ ತಾಂತ್ರಿಕ ತಜ್ಞರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ತಾಂತ್ರಿಕ ವರದಿ ಕೈ ಸೇರಿದ ತಕ್ಷಣವೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
mangaluru naguri tragedy Latest Updates
