ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಸದಸ್ಯರ ಅವಧಿ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ತೆರವಾಗಲಿರುವ 7 ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮತದಾನದ ದಿನವೇ ಫಲಿತಾಂಶ ಹೊರಬೀಳಲಿದೆ.

ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ವಿಧಾನಸಭಾ ಸದಸ್ಯರಾದ ನಝೀರ್ ಅಹಮದ್, ಜಯಮ್ಮ, ಎಚ್.ಎಂ.ರೇವಣಣ್ಣ, ಎಂ.ಸಿ.ವೇಣುಗೋಪಾಲ್, ಟಿ.ಎ.ಸರವಣ, ಎನ್.ಎಸ್.ಬೋಸರಾಜು ಹಾಗೂ ಡಿಯು. ಮಲ್ಲಿಕಾರ್ಜುನ್ ಅವರ ಅವಧಿ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ವಿಧಾನ ಪರಿಷತ್ ಚುನಾವಣೆಯ ಕುರಿತು ಜೂನ್ 11ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 18 ಕೊನೆಯ ದಿನವಾಗಿರಲಿದೆ.

ಜೂನ್ 19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ರಾಜ್ಯ ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿ 4, ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ. ಆದರೆ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರಗಳ ಚುನಾವಣೆಯನ್ನು ಆಯೋಗ ಮುಂದೂಡಿಕೆ ಮಾಡಿದೆ.