ಕೋಟ : ಕಾಲೇಜಿನಲ್ಲಿ ಕೊರೊನಾ ನಿಯಮ ಉಲ್ಲಂಘಿಸಿ ಓಣಂ ಹೆಸರಲ್ಲಿ ಡ್ಯಾನ್ಸ್ ಮಾಡಿದ ಪ್ರಕರಣವನ್ನು ಉಡುಪಿ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. NEWS NEXT ವರದಿ ಬಿತ್ತರಿಸಿದ ಬೆನ್ನಲ್ಲೇ ಕಾಲೇಜಿಗೆ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ ಭೇಟಿ ನೀಡಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಮುಂದಿನ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕೊರೊನಾ ಮಾರ್ಗಸೂಚಿ ಜಾರಿಯಲ್ಲಿದ್ದರೂ ಕೂಡ ಕೋಟ ಸಮೀಪದ ಇಸಿಆರ್ ಸಮೂಹ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಮಾಸ್ಕ್, ಸಾಮಾಜಿಕ ಅಂತರ ಮರೆತು ಡ್ಯಾನ್ಸ್ ಮಾಡಿದ್ದಾರೆ. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿಮ್ಮ ನ್ಯೂಸ್ ನೆಕ್ಸ್ಟ್ ಸಾಮಾಜಿಕ ಕಾಳಜಿಯ ಹಿನ್ನೆಲೆಯಲ್ಲಿ ವಿಸ್ತ್ರತ ವರದಿ ಯೊಂದನ್ನು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಅಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿದ್ದಾರೆ.

ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಅವರು ಕಾಲೇಜಿಗೆ ಭೇಟಿ ನೀಡಿದ್ದು, ಈ ವೇಳೆಯಲ್ಲಿ ಘಟನೆಯ ಕುರಿತು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಯನ್ನು ಕಲೆ ಹಾಕಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿದ್ರೆ ಕಠಿಣ ಕಾನೂನು ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ. ಇನ್ನು ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆಯಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ವಿವರಣೆಯನ್ನು ನೀಡಿದ್ದಾರೆ.

ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಕೆ
ಕೊರೊನಾ ನಿಯಮ ಉಲ್ಲಂಘನೆ ಮಾಡಿರುವ ಕುರಿತು NEWS NEXTಗೆ ಪ್ರತಿಕ್ರೀಯೆ ಕೊಟ್ಟಿರುವ ಬ್ರಹ್ಮಾವರ ತಹಶೀಲ್ದಾರ್ ಅವರು, ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ವಿಸ್ತ್ರತವಾದ ವರದಿಯನ್ನು ನೀಡುತ್ತೇನೆ. ಕಾಲೇಜಿಗೆ ಭೇಟಿಯನ್ನು ನೀಡಿ ಮಾಹಿತಿಯನ್ನು ಕಲೆ ಹಾಕಿದ್ದು. ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಮುಂದಿನ ಕ್ರಮಕೈಗೊಳ್ಳುತ್ತೇವೆ. ಕಾಲೇಜು ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ರೆ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಹಾಗೂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.

ಹಳೆಯ ವಿಡಿಯೋ ಎಂದು ಸುಳ್ಳು ಮಾಹಿತಿ ಕೊಟ್ಟ ಆಡಳಿತ ಮಂಡಳಿ
ECR ಕಾಲೇಜಿನ ಅಧಿಕೃತ ಫೇಸ್ಬುಕ್, ಇನ್ಸ್ಟಾಗ್ರಾಮ್ ಖಾತೆಯಲ್ಲಿ ಓಣಂ ಸಂಭ್ರಮಾಚರಣೆಯ ಕುರಿತು ಪೋಸ್ಟರ್ ಹಾಕಿದ್ದು, ವಿಡಿಯೋವನ್ನು ಪೋಸ್ಟ್ ಮಾಡಿದೆ. ಆದ್ರೆ ಅಧಿಕಾರಿ ಗಳ ಬಳಿಯಲ್ಲಿ ಇದು ಹಳೆಯ ವಿಡಿಯೋ ಎಂದು ಸುಳ್ಳು ಮಾಹಿತಿಯನ್ನು ನೀಡಿದೆ. ಆದರೆ ನಿನ್ನೆ ಕಾರ್ಯಕ್ರಮ ನಡೆಸಲು ಕಾಲೇಜಿನ ಆಡಳಿತ ಮಂಡಳಿಯೇ ಅನುಮತಿಯನ್ನು ನೀಡಿತ್ತು. ಆದ್ರೀಗ ಘಟನೆಯ ಬೆನ್ನಲ್ಲೇ ಹಳೆಯ ವಿಡಿಯೋ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕಾಲೇಜು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ನಿರ್ಮಾಣಗೊಂಡಿದೆ. ಹೀಗಿರುವಾಗ ಹಳೆಯ ವಿಡಿಯೋ ಅಂತಾ ಆಡಳಿತ ಮಂಡಳಿ ಹೇಗೆ ಹೇಳಿದೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಸಂಭ್ರಮಾಚರಣೆಯ ವಿಡಿಯೋ ಡಿಲೀಟ್
ಓಣಂ ಸಂಭ್ರಮಾಚರಣೆಯ ಕುರಿತು ಸುಮಾರು ಇವತ್ತು ನಿಮಿಷಗಳ ವಿಡಿಯೋವನ್ನು ಕಾಲೇಜಿನ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು. ಆದರೆ NEWS NEXT ವರದಿ ಪ್ರಕಟಿಸುತ್ತಿದ್ದಂತೆಯೇ ಕಾಲೇಜಿನ ಇನ್ಸ್ಟಾಗ್ರಾಂ ಖಾತೆಯಿಂದ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ. ಈ ಕುರಿತು ಜಿಲ್ಲಾಡಳಿತ ತನಿಖೆಯನ್ನು ನಡೆಸಬೇಕಾಗಿದೆ.

ಕೊರೊನಾ ವೈರಸ್ ಸೋಂಕು ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೆನ್ನಲ್ಲೇ ಕಾಲೇಜಿನಲ್ಲಿ ನಡೆದಿರುವ ವಿದ್ಯಾರ್ಥಿಗಳು, ಉಪನ್ಯಾಸಕರ ಮಾಸ್ಕ್ ರಹಿತ ಡ್ಯಾನ್ಸ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿಯೂ ಬಾರೀ ಆಕ್ರೋಶ ವ್ಯಕ್ತವಾಗಿದೆ. ನೂರಾರು ಸಂಖ್ಯೆಯಲ್ಲಿರುವ ವಿದ್ಯಾರ್ಥಗಳನ್ನು ಹಾಗೂ ಉಪನ್ಯಾಸಕರನ್ನು ಕೊರೊನಾ ತಪಾಸಣೆಗೆ ಒಳಪಡಿಸಬೇಕು. ಇಲ್ಲವಾದ್ರೆ ಸೋಂಕಿತರು ಡ್ಯಾನ್ಸ್ ಮಾಡಿದ್ರೆ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಜನರ ಜೀವದ ಜೊತೆಗೆ ಚೆಲ್ಲಾಟವಾಡುತ್ತಿರೋ ಕಾಲೇಜಿನ ವಿರುದ್ದ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕಾಗಿದೆ.