ಬೆಂಗಳೂರು : ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರ ಸಿಗ್ನಲ್ನಲ್ಲಿ ನಡೆದಿದೆ.
ತಮಿಳುನಾಡಿನ ತೂತುಕುಡಿಯ ಸಿಂಧೂ ಜ್ಯುವೆಲ್ಲರ್ಸ್ ಮಾಲೀಕ ಸಚಿನ್ ಎಂಬವರಿಗೆ ಈ ಹಣ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಕೋಟ್ಯಾಂತರ ರೂಪಾಯಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗ್ತಿದೆ ಅನ್ನೋ ಐಟಿ ಅಧಿಕಾರಿಗಳ ಮಾಹಿತಿಯನ್ನು ಆಧರಿಸಿ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಪೊಲೀಸರು ಕಾರನ್ನು ಅಡ್ಡಗಟ್ಟಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಕಾರಿನಲ್ಲಿ ಬರೋಬ್ಬರಿ 9 ಕೋಟಿ ರೂಪಾಯಿ ಇರುವುದು ಪತ್ತೆಯಾಗಿದೆ. ಹಣ ಹಾಗೂ ಕಾರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸರ ತನಿಖೆಯ ವೇಳೆಯಲ್ಲಿ ಇದೀಗ ಹಣ ಸಿಂಧೂ ಜ್ಯುವೆಲ್ಲರ್ಸ್ ಮಾಲೀಕ ಸಚಿನ್ ಅವರಿಗೆ ಸೇರಿದ್ದಾಗಿದೆ ಅನ್ನೋದು ಬೆಳಕಿಗೆ ಬರುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಮಾಲೀಕ ಸಚಿನ್ನನ್ನು ಐಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಐಟಿ ಅಧಿಕಾರಿಗಳು ಸಚಿನ್ ಮನೆಯಲ್ಲಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಬರೋಬ್ಬರಿ 1.3 ಕೋಟಿ ನಗದು ಹಣ ಪತ್ತೆಯಾಗಿದೆ. ಇದೀಗ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಈ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ.