ಕರಾವಳಿ ಜಿಲ್ಲೆಗಳಲ್ಲಿಂದು ಸಾಧಾರಣ ಮಳೆ ಮುನ್ಸೂಚನೆ
ಮುಂಗಾರು ಮಾರುತಗಳು ಕ್ಷೀಣಿಸಿದ್ದರೂ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಆರ್ಭಟಿಸುತ್ತಿದ್ದ ನೈಋತ್ಯ ಮುಂಗಾರು ಮಾರುತಗಳು ಸದ್ಯಕ್ಕೆ ತಣ್ಣಗಾಗಿದ್ದು, ಕರ್ನಾಟಕದಾದ್ಯಂತ ವರುಣನ ಅಬ್ಬರ ಕೊಂಚ ದುರ್ಬಲಗೊಂಡಿದೆ. ಆದರೆ ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಗಿಂತ ಹೆಚ್ಚಾಗಿ ಜೋರು ಬಿರುಗಾಳಿಯ ಅಬ್ಬರ ಜೋರಾಗಿರಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ನೆಚ್ಚರಿಕೆ ನೀಡಿದ್ದಾರೆ.
ಮುಂಗಾರು ಮಾರುತಗಳು ಕ್ಷೀಣಿಸಿದ್ದರೂ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಮಲೆನಾಡಿನ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದೆ. ಕಳೆದ 24 ಗಂಟೆಗಳಲ್ಲಿ ಹಾಸನದ ಚನ್ನರಾಯಪಟ್ಟಣದಲ್ಲಿ ಗರಿಷ್ಠ 4 ಸೆಂ.ಮೀ ಹಾಗೂ ಯಾದಗಿರಿಯ ಕಕ್ಕೇರಿಯಲ್ಲಿ 3 ಸೆಂ.ಮೀ ಮಳೆ ದಾಖಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕಲಬುರಗಿ ಸೇರಿದಂತೆ ಬಯಲುಸೀಮೆಯ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಮಂಡ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿಯ ಪ್ರಭಾವ ಹೆಚ್ಚಿರಲಿದೆ. ಬಲವಾದ ಗಾಳಿಯಿಂದಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
Topics

