News Next Kannada

karnataka

ಗೃಹಜ್ಯೋತಿ ಫಲಾನುಭವಿಗಳಿಗೆ ಮಹತ್ವದ ಸೂಚನೆ : ಉಚಿತ ವಿದ್ಯುತ್​ ಯೋಜನೆ ಮುಂದುವರಿಕೆಗೆ ಮರುಪರಿಶೀಲನೆ ಕಡ್ಡಾಯ

ಅರ್ಹ ನಾಗರಿಕರಿಗೆ ಮಾತ್ರ ಈ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ರಾಜ್ಯಾದ್ಯಂತ ಜುಲೈ 1ರಿಂದಲೇ ಮನೆ ಮನೆಗೆ ತೆರಳಿ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ.

By ರಶ್ಮಿ ಎಸ್. | Rashmi S
gruha jyothi free electricity verification rules karnataka

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ವಿದ್ಯುತ್ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯ ಫಲಾನುಭವಿಗಳಿಗೆ ಇಂಧನ ಇಲಾಖೆಯು ಮಹತ್ವದ ಸೂಚನೆಯೊಂದನ್ನು ನೀಡಿದೆ. ಅರ್ಹ ನಾಗರಿಕರಿಗೆ ಮಾತ್ರ ಈ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ರಾಜ್ಯಾದ್ಯಂತ ಜುಲೈ 1ರಿಂದಲೇ ಮನೆ ಮನೆಗೆ ತೆರಳಿ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ. ಈ ವಿಶೇಷ ಮರುಪರಿಶೀಲನಾ ಪ್ರಕ್ರಿಯೆಗೆ ಒಳಪಟ್ಟು ತಮ್ಮ ದಾಖಲೆಗಳನ್ನು ಅಧಿಕಾರಿಗಳಿಗೆ ಒದಗಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಇದಕ್ಕಾಗಿ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ವೋಟರ್ ಐಡಿ, ಪಡಿತರ ಚೀಟಿ, ಪ್ಯಾನ್ ಕಾರ್ಡ್ ಹಾಗೂ ಬಾಡಿಗೆದಾರರಾಗಿದ್ದರೆ ಬಾಡಿಗೆ ಕರಾರು ಪತ್ರವನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಸ್ಥಳಕ್ಕೆ ಭೇಟಿ ನೀಡುವ ಸಿಬ್ಬಂದಿಯು ಮೊಬೈಲ್ ಆಪ್ ಮೂಲಕ ಈ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ.

ನಿಗದಿತ ಗಡುವಿನೊಳಗೆ ಪ್ರಕ್ರಿಯೆ ಮುಗಿಸುವುದರಿಂದ ಅರ್ಹರಿಗೆ ತೊಂದರೆಯಾಗುವುದಿಲ್ಲ ಹಾಗೂ ಈ ಪರಿಶೀಲನೆಯಿಂದ ಸದ್ಯ ಚಾಲ್ತಿಯಲ್ಲಿರುವ ಉಚಿತ ವಿದ್ಯುತ್ ಸೌಲಭ್ಯಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಸ್ಪಷ್ಟನೆ ನೀಡಿದೆ. ಈ ಆಡಳಿತಾತ್ಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಗ್ರಾಹಕರು ಯಾವುದೇ ರೀತಿಯ ಹಣ ಪಾವತಿಸುವ ಅಗತ್ಯವಿರುವುದಿಲ್ಲ. ಒಂದು ವೇಳೆ ಗೃಹಜ್ಯೋತಿ ಯೋಜನೆಯ ಫಲಾನುಭವಿಯಾಗಲು ವಿಫಲರಾದಲ್ಲಿ ಮೊದಲಿನಂತೆ ಅವರು ಮಾಸಿಕ ವಿದ್ಯುತ್​ ಬಿಲ್​ ಪಾವತಿ ಮಾಡಬೇಕಾಗುತ್ತದೆ ಎಂದು ಇಂಧನ ಇಲಾಖೆ ಸೂಚನೆ ನೀಡಿದೆ.