ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ : ಇಂದು ಮತ್ತು ನಾಳೆ ಭಾರೀ ಮಳೆ

ಕರಾವಳಿ ತೀರದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದೆ.

By ರಶ್ಮಿ ಎಸ್. | Rashmi S

1 min read

WhatsAppPost
karavali heavy rain alert imd update
karavali heavy rain alert imd update

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆಯು ಒಳನಾಡು ಭಾಗಗಳಲ್ಲಿ ಸದ್ಯಕ್ಕೆ ದುರ್ಬಲಗೊಂಡಿದ್ದರೂ, ಕರಾವಳಿ ತೀರದಲ್ಲಿ ಮಾತ್ರ ತನ್ನ ಪ್ರಭಾವವನ್ನು ಮುಂದುವರಿಸಿದೆ. ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಕರಾವಳಿ ತೀರದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದೆ. ಮಳೆಯ ಜೊತೆಗೆ ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ನಿರಂತರವಾಗಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕಾಗಿ ವಿನಂತಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡದ ನಿಲ್ಕುಂದದಲ್ಲಿ ಭಾರಿ ಪ್ರಮಾಣದ ಅಂದರೆ 6 ಸೆಂ.ಮೀ ಮಳೆ ದಾಖಲಾಗಿದ್ದು, ಸುಬ್ರಹ್ಮಣ್ಯ ಹಾಗೂ ಕೊಲ್ಲೂರು ಭಾಗಗಳಲ್ಲೂ ಉತ್ತಮ ಮಳೆಯಾಗಿದೆ.

ಮತ್ತೊಂದೆಡೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿಯೂ ಮುಂಗಾರು ಮಳೆಯ ಪ್ರಭಾವ ಕೊಂಚ ಕಂಡುಬರಲಿದ್ದು, ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಸಾಧಾರಣ ವರ್ಷಧಾರೆಯಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ 1 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಮತ್ತು ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರ ಬಯಲು ಸೀಮೆ ಜಿಲ್ಲೆಗಳಲ್ಲಿಯೂ ವಾತಾವರಣ ತಂಪಾಗಲಿದ್ದು, ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Topics

ಸಂಬಂಧಿತ ಸುದ್ದಿಗಳು