ನೂತನ ಸಚಿವರಿಗೆ ಖಾತೆ ಹಂಚಿಕೆ ಕಗ್ಗಂಟು : ದೆಹಲಿಗೆ ತೆರಳಿದ ಡಿಕೆಶಿ
ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಠಾತ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
By ಜೋಬಿನ್ ಅಮಾಸೆಬೈಲು | Jobin Amasebail
1 min read
ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಠಾತ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸೃಷ್ಟಿಯಾಗಿರುವ ರಾಜಕೀಯ ಗೊಂದಲಗಳನ್ನು ಬಗೆಹರಿಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ. ಆಗಸ್ಟ್ 3 ರಂದು ನೂತನವಾಗಿ 19 ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲಾಗಿದ್ದರೂ, ಇದುವರೆಗೆ ಯಾರಿಗೂ ಖಾತೆಗಳನ್ನು ಹಂಚಿಕೆ ಮಾಡದಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ವಂಚಿತರಾದ ಹಲವು ಹಿರಿಯ ಶಾಸಕರು ಮತ್ತು ಅವರ ಬೆಂಬಲಿಗರು ಬಹಿರಂಗವಾಗಿಯೇ ತಮ್ಮ ಆಕ್ರೋಶ ಹೊರಹಾಕುತ್ತಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ಈ ಭಿನ್ನಮತವನ್ನು ಶಮನಗೊಳಿಸಲು ಮುಖ್ಯಮಂತ್ರಿಗಳು ದೆಹಲಿಗೆ ತೆರಳುವ ಮುನ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಶಿವಕುಮಾರ್ ಭೇಟಿ ಮಾಡಲಿದ್ದಾರೆ. ಮೂಲಗಳ ಪ್ರಕಾರ, ಅತೃಪ್ತ ಶಾಸಕರನ್ನು ಸಮಾಧಾನಪಡಿಸಲು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಅಥವಾ ಮೂವರು ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಅವಕಾಶ ನೀಡುವ ಕಠಿಣ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುವ ಸಾಧ್ಯತೆಯಿದೆ. ಹೈಕಮಾಂಡ್ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಇಂದು ಸಂಜೆಯ ವೇಳೆಗೆ ಖಾತೆ ಹಂಚಿಕೆಯೊಂದಿಗೆ ಸಂಪುಟ ಪುನಾರಚನೆಯೂ ಪೂರ್ಣಗೊಳ್ಳಲಿದೆ.
ಆಗಸ್ಟ್ 13 ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷಗಳ ಟೀಕೆಗಳಿಂದ ಬಚಾವಾಗಲು ಅಧಿವೇಶನಕ್ಕೂ ಮುನ್ನವೇ ಎಲ್ಲಾ ಆಂತರಿಕ ಬಿಕ್ಕಟ್ಟುಗಳನ್ನು ಬಗೆಹರಿಸಿಕೊಳ್ಳಲು ಸರ್ಕಾರ ತರಾತುರಿಯಲ್ಲಿದೆ.
Topics
ಸಂಬಂಧಿತ ಸುದ್ದಿಗಳು
karnataka
ರೈಲ್ವೆ ಪ್ರಯಾಣಿಕರ ಗಮನಕ್ಕೆ : ಬೆಂಗಳೂರು-ಮುಂಬೈ 'ವಂದೇ ಭಾರತ್ ಸ್ಲೀಪರ್' ಆರಂಭಕ್ಕೆ ಕ್ಷಣಗಣನೆ
karnataka
ಆಗಸ್ಟ್ 11ರವರೆಗೂ ಮುಂದುವರಿಯಲಿದೆ ಮುಂಗಾರಿನ ಅಲೆ : ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ
karnataka
ಪ್ರೀವೆಡ್ಡಿಂಗ್ ಶೂಟ್, ಬರ್ತ್ಡೇ ಆಚರಣೆಗಳಿಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್!
karnataka

