ಬೆಂಗಳೂರು : ಮಳೆಗಾಲದ ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಇದೀಗ ಆರ್ಭಟಿಸುತ್ತಿದೆ. ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಅವಾಂತರವನ್ನೇ ಸೃಷ್ಟಿಸಿದ್ದ ಮಳೆ ಇದೀಗ ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಗಸ್ಟ್ 16 ರಿಂದ 22ರ ವರೆಗೆ ಬಾರೀ ಮಳೆಯಾಗಲಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಗಸ್ಟ್ 22ರವರೆಗೆ ಮಳೆ ಮುಂದುವರಿಯಲಿದೆ.
ಅಲ್ಲದೇ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಷ್ಟೇ ಅಲ್ಲದೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ,ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಗಸ್ಟ್ 17ರಂದು ಧಾರವಾಡ, ಗದಗ, ಬೆಳಗಾವಿ, ಹಾವೇರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರಗಿ, ಬೀದರ್ , ಯಾದಗಿರಿ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಬಾರೀ ಮಳೆಯಾಗಲಿದೆ. ಅದ್ರಲ್ಲೂ ನಿರಂತರವಾಗಿ ಗಾಳಿ ಬೀಸುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಕಳೆದ ಕೆಲವು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ಮಳೆಯ ಕೊರತೆ ಉಂಟಾಗಿತ್ತು. ಆದರೂ ಕೆಲವು ಕಡೆಗಳಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಆದರೆ ಮುಂದಿನ ಒಂದು ವಾರಗಳ ಕಾಲ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅನ್ನದಾತರು ಕೊಂಚ ನಿರಾಳರಾಗಿದ್ದಾರೆ.