ಆಗಸ್ಟ್​ 11ರವರೆಗೂ ಮುಂದುವರಿಯಲಿದೆ ಮುಂಗಾರಿನ ಅಲೆ : ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಪ್ರಮುಖವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

By ರಶ್ಮಿ ಎಸ್. | Rashmi S

1 min read

WhatsAppPost
Karnataka monsoon rain forecast august 11 coastal districts
Karnataka monsoon rain forecast august 11 coastal districts

ರಾಜ್ಯದಲ್ಲಿ ತಡವಾಗಿ ಪ್ರವೇಶಿಸಿದರೂ ಸದ್ಯ ತೀವ್ರಗೊಂಡಿರುವ ಮುಂಗಾರು ಮಳೆಯು ಮುಂದಿನ ಕೆಲವು ದಿನಗಳ ಕಾಲ ಸುರಿಯಲಿದೆ. ಕರ್ನಾಟಕದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರಾಂತ್ಯಗಳಲ್ಲಿ ಆಗಸ್ಟ್ 11ರವರೆಗೆ ವ್ಯಾಪಕವಾಗಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಪ್ರಮುಖವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗದ ಆಗುಂಬೆಯಲ್ಲಿ ಗರಿಷ್ಠ 9 ಸೆಂ.ಮೀ. ಹಾಗೂ ಶೃಂಗೇರಿಯಲ್ಲಿ 6 ಸೆಂ.ಮೀ. ಮಳೆ ದಾಖಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲೂ 5 ಸೆಂ.ಮೀ. ಮಳೆಯಾಗಿದೆ.

ಇನ್ನೊಂದೆಡೆ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ ಹಾಗೂ ಕೋಲಾರ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇತ್ತ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಭಾಗಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಂಭವವಿದೆ. ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ ಹಗುರ ತುಂತುರು ಮಳೆಯಾಗುವ ಸಾಧ್ಯತೆಯಿದೆ.

Topics

ಸಂಬಂಧಿತ ಸುದ್ದಿಗಳು