Kannada News Next

karnataka

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಆರ್ಭಟ : 13 ಜಿಲ್ಲೆಗಳಲ್ಲಿ ಮಾತ್ರ ಇಂದು ಮಳೆ

ಕರಾವಳಿ ತೀರದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

By ರಶ್ಮಿ ಎಸ್. | Rashmi S
Karnataka monsoon update rains in 13 districts today

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆಯ ಪ್ರಭಾವವು ಗಣನೀಯವಾಗಿ ಕುಸಿದಿದ್ದು, ರಾಜ್ಯಾದ್ಯಂತ ಮಳೆಯ ತೀವ್ರತೆ ದುರ್ಬಲಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಕರಾವಳಿ ಮತ್ತು ಒಳನಾಡಿನ ಕೇವಲ 13 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ತೀರದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹನಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಮಳೆಯ ಕೊರತೆ ಎದುರಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13ರಂದು ಗುಡುಗು ಮತ್ತು ಬಿರುಗಾಳಿ ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಚಾಮರಾಜನಗರದಲ್ಲಿ ಮಾತ್ರ 2 ಸೆಂಟಿಮೀಟರ್ ಮಳೆಯಾಗಿದೆ.

ಮತ್ತೊಂದೆಡೆ, ವಾಯವ್ಯ ಬಂಗಾಳಕೊಲ್ಲಿ ಹಾಗೂ ಒಡಿಶಾ-ಆಂಧ್ರಪ್ರದೇಶ ಕರಾವಳಿಗೆ ಹೊಂದಿಕೊಂಡಂತೆ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಈ ಚಂಡಮಾರುತದ ಸುರುಳಿಯು ನೈಋತ್ಯ ದಿಕ್ಕಿನತ್ತ ಚಲಿಸುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಬಲಗೊಳ್ಳಲಿದೆ. ಈ ಹವಾಮಾನ ವ್ಯವಸ್ಥೆಯ ಮುಂದಿನ ಚಲನೆಯ ಆಧಾರದ ಮೇಲಷ್ಟೇ ಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ಮಳೆ ಚೇತರಿಸಿಕೊಳ್ಳಲಿದೆಯೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.