ಬೆಂಗಳೂರು : ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದೆ. ರಾಜ್ಯದ ಜನರಲ್ಲಿ ಇನ್ನೆಷ್ಟು ದಿನ ಮಳೆ ಸುರಿಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಚಿತ್ರಣವನ್ನು ತೆರೆದಿಟ್ಟಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 17ರಿಂದ 23ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಚಟುವಟಿಕೆ ಮುಂದುವರಿಯುವ ನಿರೀಕ್ಷೆಯಿದೆ. ಆದರೆ ಅಗಸ್ಟ್ 24ರವರೆಗೆ ಧಾರಾಕಾರ ಮಳೆಯಾಗುವ ಕುರಿತು ಯಾವುದೇ ಎಚ್ಚರಿಕೆಯನ್ನು ಐಎಂಡಿ ನೀಡಿಲ್ಲ.
ಹೀಗಾಗಿ ವ್ಯಾಪಕ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. ಕರಾವಳಿ ಕರ್ನಾಟಕ ಮಾತ್ರವಲ್ಲದೇ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಂದಿನ ಆರು ತಿಂಗಳ ಕಾಲ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾದ್ರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನಲ್ಲಿ ಅಗಸ್ಟ್ 18ರಿಂದ 21ರವರೆಗೆ ಗುಡುಗು ಮಿಂಚಿನ ಜೊತೆಗೆ ಜೋರಾದ ಗಾಳಿ ಬೀಸುವ ಕುರಿತು ಎಚ್ಚರಿಕೆಯನ್ನು ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆ ಮುಂದುವರಿಯಲಿದೆ. ಆದರೆ ಭಾರೀ ಮಳೆಯ ಬದಲು ನಿರಂತರವಾಗಿ ತುಂತುರು ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಕರ್ನಾಟಕದಲ್ಲಿ ಕನಿಷ್ಠ ಆಗಸ್ಟ್ 23ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆ ಒಂದೇ ರೀತಿಯಾಗಿ ಇರೋದಿಲ್ಲ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಈ ಬಾರಿ ನಿರೀಕ್ಷಿತ ಮಳೆ ಸುರಿದಿಲ್ಲ, ಇದೀಗ ಮತ್ತೆ ಒಂದು ವಾರಗಳ ಕಾಲ ಮಳೆ ಮುಂದುವರಿಕೆ ಆಗಲಿದ್ದು, ಕೃಷಿಕರಿಗೆ ವರದಾನವಾಗಲಿದೆ.