ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮದ ತನಿಖೆ ಚುರುಕುಗೊಂಡಿದ್ದು, ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಒಂದೊಂದೇ ಸ್ಪೋಟಕ ಮಾಹಿತಿಯನ್ನು ಪತ್ತೆ ಹಚ್ಚುತ್ತಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದಲ್ಲಿ ಬರೋಬ್ಬರಿ 5 ಕೋಟಿಗೂ ಅಧಿಕ ಹಣದ ವಹಿವಾಟು ನಡೆದಿರುವುದು ತನಿಖೆಯಿಂದ ಬಯಲಾಗಿದೆ. ವಿವಿದ ಬ್ಯಾಂಕ್ ಖಾತೆಗಳಿಗೆ 85 ಲಕ್ಷ ರೂಪಾಯಿ ಹಣ ವರ್ಗಾವಣೆ ಆಗಿದ್ದು, ಇದುವರೆಗೆ ಒಟ್ಟು 273 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಕೆಪಿಎಸ್ಸಿ ಸದಸ್ಯರಾಗಿರುವ ಶಾಂತಾ ಹೊಸಮನಿ ಅವರ ವಿರುದ್ದವೂ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಿಐಡಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೊಮ್ಮೆ ನೋಟೀಸ್ ನೀಡಲು ಸಿದ್ದತೆ ನಡೆಸಲಾಗಿದೆ. 15 ಅಭ್ಯರ್ಥಿಗಳು ಸೇರಿದಂತೆ ಹಲವು ಆರೋಪಿಗಳಿಂದ ತಪ್ಪೊಪ್ಪಿಗೆ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಬೀದರ್ನ ಸೌಹಾರ್ದ ಬ್ಯಾಂಕಿನ ಮ್ಯಾನೇಜರ್ ಅವರನ್ನೂ ಕೂಡ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಬಸವರಾಜ್ ಕನ್ನಾಳೆಯೊಂದಿಗೆ ಹಣಕಾಸಿನ ವ್ಯವಹಾರ ನಡೆದಿರುವ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಜ್ಞಾನೇಂದ್ರ ಅವರೊಂದಿಗೆ ಸಂಪರ್ಕದಲ್ಲಿದ್ದ ಯುವತಿಯ ಬಳಿಯಲ್ಲಿದ್ದ 23 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಖುಡ ಸಿಐಡಿ ವಶಕ್ಕೆ ಪಡೆದುಕೊಂಡಿದೆ.
ಕೆಪಿಎಸ್ಸಿ ಅಕ್ರಮದ ತನಿಖೆಗೆ ಸಂಬಂಧಿಸಿದಂಥೆ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದು ಮಾಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಇನ್ನು ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯವಾಗಿ ಆರೋಪ- ಪ್ರತ್ಯಾರೋಪಗಳು ಕೂಡ ನಡೆಯುತ್ತಿದೆ.
ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಇದೀಗ ಕಾಂಗ್ರೆಸ್ ಸರಕಾರಕ್ಕೆ ಮುಜುಗರ ತರಿಸುತ್ತಿದೆ. ಜೆಡಿಎಸ್, ಬಿಜೆಪಿ ಈಗಾಗಲೇ ಕಾಂಗ್ರೆಸ್ ವಿರುದ್ದ ಹರಿಹಾಯುತ್ತಿದೆ. ಮತ್ತೊಂದೆಡೆಯಲ್ಲಿ ಸಿಐಡಿ ಅಕ್ರಮದ ಒಂದೊಂದೇ ಮಾಹಿತಿಯನ್ನು ಬಯಲಿಗೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಈ ಅಕ್ರಮದ ಇನ್ನಷ್ಟು ಮಾಹಿತಿ ಹೊರ ಬೀಳುವ ಸಾಧ್ಯತೆಯಿದೆ.