ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದೆ. ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಶಾಲಾ ಸಮಯದಲ್ಲಿ ಬದಲಾವಣೆಯನ್ನು ತರಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ. ಕರ್ನಾಟಕ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಮಾಹಿತಿಯನ್ನು ನೀಡಿದ್ದು, ಶೀಘ್ರದಲ್ಲಿಯೇ ಶಾಲಾ ಆಡಳಿತ ಮಂಡಳಿ, ಪೋಷಕರು ಹಾಗೂ ಸಂಚಾರ ಪೊಲೀಸರ ಜೊತೆಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ದಿನೇ ದಿನೇ ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಆದರೂ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಅದ್ರಲ್ಲೂ ಬೆಳಗಿನ ಹಾಗೂ ಸಂಜೆಯ ವೇಳೆಯಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚದಂತೆ ಮುನ್ನೆಚ್ಚರಿಕೆಯನ್ನು ವಹಿಸುವ ಸಲುವಾಗಿ ಶಾಲಾ ವೇಳಾಪಟ್ಟಿಯಲ್ಲಿಯೇ ಬದಲಾವಣೆ ತರಲು ರಾಜ್ಯ ಸರಕಾರ ಗಂಭೀರವಾಗಿ ಪರಿಶೀಲಿಸಿದೆ. ಬೆಂಗಳೂರಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಸಲುವಾಗಿ ಶಾಲಾ ಸಮಯದಲ್ಲಿ ಪರಿಷ್ಕರಣೆ ತರುವಂತೆ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಸಾರ್ವಜನಿಕರಿಂದ ಮನವಿಗಳು ಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಸಮಸ್ಯೆ ತಡೆಗಟ್ಟುವ ಸಲುವಾಗಿ ಶಾಲೆ ಮತ್ತು ಕಚೇರಿ ವೇಳಾಪಟ್ಟಿಯಲ್ಲಿ ಬದಲಾವಣೆ ತರುವಂತೆ ರಾಜ್ಯ ಸರಕಾರಕ್ಕೆ ಈಗಾಗಲೇ ನ್ಯಾಯಾಲಯ ಸೂಚನೆ ನೀಡಿತ್ತು. ಶಾಲಾ ಸಮಯದಲ್ಲಿ ಸುಮಾರು 30 ನಿಮಿಷದಿಂದ ಒಂದು ಗಂಟೆಗಳ ಕಾಲ ಮುಂಚಿತವಾಗಿ ಆರಂಭಿಸುವಂತೆ ಸಲಹೆಗಳು ಬರುತ್ತಿದ್ದು, ಟ್ರಾಫಿಕ್ ಸಮಸ್ಯೆಯನ್ನು ಅರಿತು ಕ್ರಮಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.