Kannada News Next

karnataka

ತೀರ್ಥಹಳ್ಳಿಯಲ್ಲಿ ಘೋರ ದುರಂತ : ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವು

ಗುಡ್ಡ ಕುಸಿದು ಮನೆಯ ಮೇಲೆ ಬಿದ್ದು ಒಂದೇ ಮನೆಯ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ

By Arun Gundmi | ಅರುಣ್‌ ಗುಂಡ್ಮಿ Editor-in-Chief

ತೀರ್ಥಹಳ್ಳಿ : ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು ಮನೆಯ ಮೇಲೆ ಬಿದ್ದು ಒಂದೇ ಮನೆಯ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ಮಲ್ಲಿಕಾರ್ಜುನ್‌ (35 ವರ್ಷ), ನಾಗವೇಣಿ (28 ವರ್ಷ), ಸಂತೋಷ್‌ (3 ವರ್ಷ) ಎಂಬವರೇ ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.

ಕಳೆದ ಕೆಲವು ದಿನಗಳಿಂದಲೂ ಈ ಭಾಗದಲ್ಲಿ ಧಾರಾಕಾರ ಸುರಿಯುತ್ತಿದ್ದು, ಭಾರೀ ಮಳೆಯಿಂದಾಗಿ ಗುಡ್ಡದ ಮಣ್ಣು ಸಡಿಲವಾಗಿತ್ತು. ಮಳೆಯಿಂದ ಏಕಾಏಕಿ ಗುಡ್ಡದ ಮಣ್ಣು ಕುಸಿದು ಮನೆಯ ಮೇಲೆ ಬಿದ್ದಿದೆ.

ಬೆಟ್ಟದ ತಪ್ಪಲಿನಲ್ಲಿ ವಾಸವಾಗಿದ್ದ ಮನೆಯ ಮೇಲೆ ಬಿದ್ದ ಪರಿಣಾಮವಾಗಿ ಮನೆ ಸಂಪೂರ್ಣವಾಗಿ ಜಖಂಗೊಂಡಿದ್ದು, ಮನೆಯಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು ತೀರ್ಥಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.